ಬೂತ್ ಅಧ್ಯಕ್ಷರು ಪಕ್ಷದ ಜೀವಾಳ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಷ್ಟ್ರೀಯ ಘಟಕದ ಮಾದರಿಯಲ್ಲೇ ರಾಜ್ಯದಲ್ಲೂ ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ
ಬೂತ್ ಮಟ್ಟದ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಅವರೊಂದಿಗೆ ಸಂಘಟನೆ ಬಗ್ಗೆ ಸಮಾಲೋಚನೆ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಣೆಯನ್ನು ಪಾರಂಭಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್ಗಳನ್ನು ಬಲಪಡಿಸಲು ಆದ್ಯತೆ ನೀಡಲಾಗುವುದು. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ನೀಡಿ ದೀಪಾವಳಿ ಶುಭಾಶಯ ಕೋರಿದ್ದೇನೆ. ರಾಜ್ಯದಲ್ಲಿ 58282 ಬೂತ್ಗಳು ಇವೆ. ಎಲ್ಲ ಬೂತ್ಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದಿಲ್ಲ
ಪ್ರತಿ ಬೂತ್ ಪ್ರಮುಖ ಮತ್ತು ಪಕ್ಷದ ಜೀವಾಳ ಎಂಬುದು ಕೇಂದ್ರ ಗೃಹ ಸಚಿವರು ಆದ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಕಲ್ಪನೆ ಮತ್ತು ಚಿಂತನೆಯಾಗಿದೆ. ಅವರ ಚಿಂತನೆಯಂತೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ಕಾರ್ಯಾರಂಭ ಮಾಡಿದ್ದೇನೆ. ಇಡೀ ರಾಜ್ಯದಲ್ಲಿರುವ ಎಲ್ಲ 58 ಸಾವಿರಕ್ಕೂ ಹೆಚ್ಚು ಬೂತ್ಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹೆಜ್ಜೆ ಇಡುವುದಾಗಿ ಹೇಳಿದರು.
ಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಅಧ್ಯಕ್ಷರಾಗಿ ಈ ಮಟ್ಟಕ್ಕೆ ಬೆಳೆದುಬಂದಿದ್ದಾರೆ. ಬಿಜೆಪಿ, ರಾಷ್ಟ್ರೀಯ ಅಧ್ಯಕ್ಷರಂತೆ ಬೂತ್ ಅಧ್ಯಕ್ಷರನ್ನೂ ಗೌರವದಿಂದ ಕಾಣುತ್ತದೆ. ಇದೇ ಬಿಜೆಪಿಯ ವಿಶೇಷತೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ತಕ್ಕ ಉತ್ತರ
ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆ ಎಂದು ವಿಶ್ವಾಸದಿಂದ ನುಡಿದರು.


