ಬೆಂಗಳೂರು:ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ನಾಳೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರಾಗಲಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನ್ಯಾಯಾಲಯ ಜಾಮೀನು ನೀಡಿತ್ತು.
ಜನಪ್ರತಿನಿಧಿಗಳ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಶುಕ್ರವಾರ ಹಾಜರಾಗಿ ಜಾಮೀನು ಕೋರಲಿದ್ದಾರೆ.
ಮುಂಜಾಗ್ರತಾ ಕ್ರಮ
ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುವುದನ್ನು ಕೆಪಿಸಿಸಿ ಖಚಿತ ಪಡಿಸಿದೆ, ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಮುಂಜಾಗ್ರತಾ ಕ್ರಮಗಳನ್ನು ನಗರ ಪೊಲೀಸರು ಕೈಗೊಳ್ಳಲಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಶೇಕಡ 40ರಷ್ಟು ಕಮೀಷನ್, ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿಗಳ ಹುದ್ದೆಗೆ 500 ಕೋಟಿ ರೂ.ಗಳನ್ನು ಹೈಕಮಾಂಡ್ಗೆ ನೀಡಿ ಹುದ್ದೆ ಪಡೆದಿದ್ದಾರೆ, ಇವರ ಆಡಳಿತ ಭ್ರಷ್ಟಾಚಾರದಿಂದ ಕೂಡಿದೆ ಎಂದು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಆರೋಪ ಮಾಡಿತ್ತು.
ಆ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಸಾರ್ವಜನಿಕ ಭಾಷಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದರು.
ಭ್ರಷ್ಟ ಆಡಳಿತ ಆರೋಪ
ಈ ಆರೋಪದ ಜೊತೆಗೆ ಕೋವಿಡ್ ಕಿಟ್ ಖರೀದಿಯಲ್ಲಿ ಶೇಕಡ 75ರಷ್ಟು ಡೀಲ್, ಪಿಡಬ್ಲೂಡಿ ಗುತ್ತಿಗೆಯಲ್ಲಿ ಶೇಕಡ 40ರಷ್ಟು ಡೀಲ್ ಸೇರಿದಂತೆ ಕಾಮಗಾರಿಗಳಲ್ಲಿ ಭಾರೀ ಮೊತ್ತದ ಕಮೀಷನ್ ಪಡೆದು ಬಿಜೆಪಿ ಸರ್ಕಾರ ಭ್ರಷ್ಟ ಆಡಳಿತ ನೀಡುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು.
ಇಂತಹ ಹೇಳಿಕೆ ಹಾಗೂ ಜಾಹೀರಾತುಗಳು ಚುನಾವಣಾ ಸಮಯದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಿರುವ ಅಪಮಾನವಾಗಿದೆ, ಆದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರುಗಳ ವಿರುದ್ಧ ಐಪಿಸಿ ಕಲಂ 499, 500 ರೀತ್ಯಾ ಮಾನನಷ್ಟ ಮೊಕದ್ದಮೆ ಖಾಸಗಿ ದೂರನ್ನು ಬಿಜೆಪಿ ದಾಖಲಿಸಿತ್ತು.
ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವ ಪ್ರಸಾದ್ 2023ರ ಮೇ 8ರಂದು 42ನೇ ಎಸಿಎಂಎಂ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.
ಸಮನ್ ಜಾರಿ
ದೂರಿನ ಆಧಾರದ ಮೇಲೆ ಆರೋಪಿಗಳಿಗೆ ನ್ಯಾಯಾಲಯ ಸಮನ್ ಜಾರಿ ಮಾಡಿತ್ತು, ಕಳೆದ ಶನಿವಾರ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ಖುದ್ದು ಹಾಜರಾಗಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು.
ಇದೇ ಸಂದರ್ಭದಲ್ಲಿ ರಾಹುಲ್ ಪರ ವಕೀಲರು, ನ್ಯಾಯಾಲಯಕ್ಕೆ ಹಾಜರಾಗಲು ಸಮಯ ಕೋರಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜೂನ್ ೭ಕ್ಕೆ ಮುಂದೂಡಲಾಗಿತ್ತು.
ಸಮನ್ ಜಾರಿ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಲೇಬೇಕಿರುವುದರಿಂದ ರಾಹುಲ್ ನಾಳೆ ಒಂದು ದಿನದ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.


