ಬೆಂಗಳೂರು:ಕುಟುಂಬ ರಾಜಕಾರಣವೇ ಪ್ರತಿಷ್ಠೆಯಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದವರು ಕ್ಷೇತ್ರ ತೆರವುಗೊಳಿಸುವಂತೆ ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಮಾಡಿದ್ದಾರೆ.
ಈ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಮತ ಯಾಚಿಸಬಹುದಾಗಿದೆ.
ಅವಿರತ ಹೋರಾಟ
ಉಪಚುನಾವಣೆಯನ್ನು ಸರ್ಕಾರ ಎಷ್ಟು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ, ಅಷ್ಟೇ ಪ್ರತಿಷ್ಠೆಯಾಗಿ ಪ್ರತಿಪಕ್ಷ ಎನ್ಡಿಎ ಮೈತ್ರಿಕೂಟ ತೆಗೆದುಕೊಂಡಿದ್ದು, ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪೆಟ್ಟು ನೀಡಲು ಅವಿರತ ಹೋರಾಟ ನಡೆಸಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಕುಡಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಎನ್ಡಿಎ ಅಭ್ಯರ್ಥಿ ನಿಖಿಲ್ಗೆ ಪ್ರತಿಸ್ಪರ್ಧಿ, ಕ್ಷೇತ್ರದಲ್ಲಿ ಯೋಗೇಶ್ವರ್ಗಿಂತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ, ಪಕ್ಷದ ಅಭ್ಯರ್ಥಿ ಗೆಲುವು ಹೆಚ್ಚು ಪ್ರತಿಷ್ಠೆಯಾಗಿದ್ದು, ಗೌಡರ ಕುಟುಂಬದ ವಿರುದ್ಧ ಟೊಂಕ ಕಟ್ಟಿ ಹೋರಾಟ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ
ಇನ್ನು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.
ಸಂಡೂರು ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಸಂಸದ ಇ.ತುಕಾರಾಂ ಪತ್ನಿ ಅನ್ನಪೂರ್ಣ ಕಾಂಗ್ರೆಸ್ನ ಅಭ್ಯರ್ಥಿಯಾಗಿದ್ದಾರೆ.
ಇಲ್ಲಿ ಸಚಿವ ಸಂತೋಷ್ ಲಾಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಡೂರು ಉಳಿಸಿಕೊಳ್ಳುವುದು ಪ್ರತಿಷ್ಠೆಯಾಗಿದೆ.
ಐದು ದಿನ ಬಿಡಾರ
ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಕ್ಷೇತ್ರದಲ್ಲಿ ಐದು ದಿನ ಬಿಡಾರ ಹೂಡಿ ಪ್ರಚಾರ ಕೈಗೊಂಡಿದ್ದಾರೆ.
ಅಷ್ಟೇ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ, ಕಾಂಗ್ರೆಸ್ನಿಂದ ಕ್ಷೇತ್ರ ಕಸಿದುಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ದಿಗ್ಗಜ ನಾಯಕರುಗಳನ್ನು ಪ್ರಚಾರಕ್ಕಿಳಿಸಿದೆ.
ಮೂರು ಕ್ಷೇತ್ರಗಳಲ್ಲಿ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಲೋಕಸಭೆಗೆ ಆಯ್ಕೆಗೊಂಡಿದ್ದರಿಂದ ಈ ಸ್ಥಾನಗಳು ತೆರವಾಗಿದ್ದು ಉಪಚುನಾವಣೆ ಎದುರಾಗಿದೆ.
ಬೃಹತ್ ಸಮಾವೇಶ
ಪ್ರಚಾರಕ್ಕೆ ಕೊನೆಯ ದಿನದಂದು ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಬೃಹತ್ ಸಮಾವೇಶ ನಡೆಸಿ ಮತದಾರರ ಓಲೈಕೆಗೆ ಪ್ರಯತ್ನಿಸಿದವು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಹಾಗೂ ಕಾಂಗ್ರೆಸ್ನ ಘಟಾನುಘಟಿಗಳೂ ಸೇರಿದಂತೆ ಇಡೀ ಸರ್ಕಾರ ಚನ್ನಪಟ್ಟಣದಲ್ಲೇ ಬಿಡಾರ ಹೂಡಿ ಮತದಾರರ ಒಲವಿಗೆ ಪ್ರಯತ್ನ ನಡೆಸಿದರು.
ಸರ್ಕಾರದ ವಿರುದ್ಧ ಬಹಿರಂಗ ಕದನಕ್ಕೆ ಇಳಿದಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಕ್ಷೇತ್ರದಲ್ಲೇ ಬೃಹತ್ ಬಹಿರಂಗ ಸಭೆ ಮತ್ತು ಪಾದಯಾತ್ರೆ ನಡೆಸಿದರು.
ಹಲವು ಮುಖಂಡರು
ಪ್ರಚಾರ ಕಾರ್ಯದಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಉಪಚುನಾವಣೆಯ ದಿನದಂದು ಮತದಾನಕ್ಕೆ ಅನುಕೂಲವಾಗುವಂತೆ ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.


