ಚುನಾವಣಾ ವ್ಯವಸ್ಥೆಯೂ ಹದಗೆಟ್ಟಿದೆ: ಮುಖ್ಯಮಂತ್ರಿ ಬೇಸರ
ಬೆಂಗಳೂರು:ರಾಜ್ಯಾದ್ಯಂತ ಕ್ರೈಮ್, ಡ್ರಗ್ಸ್ ಹಾವಳಿ ಹೆಚ್ಚುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
ಡ್ರಗ್ಸ್, ಕ್ರೈಮ್ ಬಗ್ಗೆ ಅಷ್ಟೇ ಅಲ್ಲ, ಭ್ರಷ್ಟಾಚಾರದ ಪಿಡುಗು ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿ ಅವರು, ನಮ್ಮ ಚುನಾವಣಾ ವ್ಯವಸ್ಥೆಯೂ ಹದಗೆಟ್ಟು ಹೋಗಿದೆ ಎಂದು ಬೇಸರ ಹೊರಹಾಕಿದರು.
ಹೊಸ ವರ್ಷಾರಂಭ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಹಿರಿಯ ಅಧಿಕಾರಿಗಳಿಂದ ಶುಭಹಾರೈಕೆಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ, ಆರ್ಥಿಕ ಪರಿಸ್ಥಿತಿ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಮುಂದೆ ತಮ್ಮ ಮಾತುಗಳನ್ನು ಬಹಳ ಸೌಮ್ಯದಿಂದ ಬಿಡಿಸಿಟ್ಟರು.
ಯುವಜನತೆ ಭವಿಷ್ಯ ರಕ್ಷಿಸಿ
ಯುವಜನತೆ ನಮ್ಮ ಸಮಾಜದ ಆಸ್ತಿ, ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸಬೇಕು, ಡ್ರಗ್ಸ್ ಹಾವಳಿ ಹೆಚ್ಚಾಗಿ ಅಪರಾಧಿಕ ಜಗತ್ತಿನ ಕಡೆ ಯುವಜನರು ಆಕರ್ಷಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಜ್ಞಾನ, ತಂತ್ರಜ್ಞಾನ ಬಹಳಷ್ಟು ಅಭಿವೃದ್ಧಿಯಾಗಿದೆ, ಅದನ್ನು ಪೋಲಿಸ್ ಇಲಾಖೆಯೂ ಸಮರ್ಥವಾಗಿ ಬಳಕೆ ಮಾಡಿಕೊಳ್ಳುತ್ತಿದೆ, ಇಷ್ಟಾದರೂ ಡ್ರಗ್ಸ್ ಹಾವಳಿ ಮತ್ತು ಕ್ರೈಮ್ ತಡೆಯುವಲ್ಲಿ ಏಕೆ ವಿಫಲರಾಗಿದ್ದೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ನೀವು, ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ, ರಾಜ್ಯದಲ್ಲಿ ಅದ್ಭುತ ಬದಲಾವಣೆ ಮತ್ತು ಸುಧಾರಣೆಗಳನ್ನು ತರಲು ಸಾಧ್ಯವಿದೆ, ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ ಎಂದರು.

ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಿ
ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆ ಅಗತ್ಯವಿಲ್ಲ, ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು, ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚುತ್ತಿರುವುದು ದುರಂತ, ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಕರೆ ನೀಡಿದರು.
ನಮ್ಮ-ನಿಮ್ಮ ಉದ್ದೇಶ ಒಂದೆ, ಸಮಾಜದ ಪ್ರಗತಿ ಮತ್ತು ಆರೋಗ್ಯಕರ ಬದಲಾವಣೆ, ಇದಕ್ಕಾಗಿ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳೋಣ.
ಹೊಸ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಹಣವಿಲ್ಲ, ನಿಜ, ಆದರೆ, ಬೊಕ್ಕಸ ಬರಿದಾಗಿದೆ, ಅಭಿವೃದ್ಧಿಗೆ ಹಣವಿಲ್ಲ ಎಂಬುದು ಅಪ್ಪಟ ಸುಳ್ಳು.
ಬಿಜೆಪಿ ಸರ್ಕಾರ ಕಾರಣ
ಹಿಂದಿನ ಬಿಜೆಪಿ ಸರ್ಕಾರ ಬಜೆಟ್ ಅನುಮತಿ ಪಡೆಯದೇ 2 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಕಾಮಗಾರಿಗಳಿಗೆ ಹಸಿರು ನಿಶಾನೆ ತೋರಿದ್ದೇ ಇಂತಹ ಪರಿಸ್ಥಿತಿಗೆ ಕಾರಣ.
ತಮ್ಮ ತಪ್ಪನ್ನು ಮರೆಮಾಚಿ ದಿನನಿತ್ಯ ಹಣ ಇಲ್ಲ ಎಂದು ನಮ್ಮನ್ನು ದೂಷಿಸುತ್ತಾ ಪ್ರತಿಪಕ್ಷದವರು ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಕಿಡಿಕಾರಿದರು.
ಹಣ ಸಂಗ್ರಹಿಸುವ ಮತ್ತು ವೆಚ್ಚ ಮಾಡುವ ಇಲಾಖೆಗಳೆರಡೂ ಸಮತೋಲನದಿಂದ ಕರ್ತವ್ಯ ನಿರ್ವಹಿಸುವ ಮೂಲಕ ಹೆಚ್ಚು ಸೋರಿಕೆ ಆಗದಂತೆ ತಡೆಯುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ.
ಅಧಿಕಾರಿಗಳು ಹೆಚ್ಚು ಶ್ರಮವಹಿಸಿ
ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ಅಧಿಕಾರಿಗಳು ಹೆಚ್ಚು ಶ್ರಮ ವಹಿಸಬೇಕು ಎಂದರು.
ಆಡಳಿತದಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚು, ನಾವು ಕಾನೂನುಗಳನ್ನು ರಚಿಸಿ, ಜಾರಿ ಆಗುವ ದಿಕ್ಕಿನಲ್ಲಿ ನಿಗಾ ವಹಿಸುತ್ತೇವೆ, ಅಧಿಕಾರಿ ವರ್ಗ ಸಮಾಜಕ್ಕೆ ಪೂರಕವಾಗಿ ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು.
ಸಮಾಜದ ಎಲ್ಲಾ ವರ್ಗಗಳಿಗೆ ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಒದಗಿಸಬೇಕು, ಇಲ್ಲದಿದ್ದರೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುವುದಿಲ್ಲ ಎಂಬುದಾಗಿ ಸಂವಿಧಾನ ಜಾರಿ ಸಂದರ್ಭದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದರು ಎಂದು ಮುಖ್ಯಮಂತ್ರಿ ಉಲ್ಲೇಖಿಸಿದರು.
ಆರ್ಥಿಕತೆಗೆ ಹೊಸ ಚೈತನ್ಯ
ಭಾರತ ಆರ್ಥಿಕ ಹಿಂಜರಿತ ಎದುರಿಸುತ್ತಿದ್ದಾಗ, ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಿದರು, ಇದರ ಲಾಭ ಜನರಿಗೆ ಲಭಿಸುವಂತೆ ಮಾಡಿದರು.
ಸಮಾನ ಅವಕಾಶಗಳು ಸಿಕ್ಕಾಗ ಸಮಾನತೆಯ ದಿಕ್ಕಿನಲ್ಲಿ ಸಾಗಬಹುದು ಎನ್ನುವ ಕಾರಣದಿಂದಲೇ ನಮ್ಮ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಜನರ ಕೈಯಲ್ಲಿ ಹಣ ಇದ್ದಾಗ ಖರೀದಿ ಶಕ್ತಿ ಹೆಚ್ಚಾಗುತ್ತದೆ, ಮಧ್ಯವರ್ತಿಗಳ ಹಾವಳಿ ಇಲ್ಲದೆ ಜನರಿಗೆ ನೇರ ಹಣ ತಲುಪಿಸುತ್ತಿದ್ದೇವೆ, ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.


