ಬೆಂಗಳೂರು:ಆಡಳಿತಶಾಹಿ ವಿರುದ್ಧ ಪಕ್ಷದ ಶಾಸಕರೇ ತಿರುಗಿಬೀಳುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿವೃದ್ಧಿ ಕಾರ್ಯಗಳಿಗಾಗಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಕೋಟಿ ರೂ. ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಬರುವ ಜುಲೈ ತಿಂಗಳಲ್ಲೇ ಅನುದಾನ ಬಿಡುಗಡೆಯಾಗಲಿದ್ದು, ಕ್ಷೇತ್ರದ ಶಾಸಕರು ಮಾಡುವ ಶಿಫಾರಸಿನ ಮೇಲೆ ಅಧಿಕಾರಿಗಳು ಮೂಲಸೌಕರ್ಯಗಳನ್ನು ತ್ವರಿತಗತಿಯಲ್ಲಿ ಕೈಗೆತ್ತಿಕೊಳ್ಳಬೇಕು.
ಹಲವರ ಅಪಸ್ವರ
ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ಎನ್.ವೈ.ಗೋಪಾಲಕೃಷ್ಣ, ಬೇಳೂರು ಗೋಪಾಲಕೃಷ್ಣ, ರಾಜುಕಾಗೆ ಸೇರಿದಂತೆ ಹಲವರು ಅಪಸ್ವರ ಎತ್ತಿದ ಬೆನ್ನಲ್ಲೇ ಮುಖ್ಯಮಂತ್ರಿ ಅವರು, ಅವರುಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ದೆಹಲಿಯಿಂದ ಹಿಂತಿರುಗುತ್ತಿದಂತೆ ಮುಖ್ಯಮಂತ್ರಿ ಅವರು, ಪ್ರತಿನಿತ್ಯ ಬೆಳಗ್ಗೆ ಪಕ್ಷದ ಶಾಸಕರನ್ನು ತಂಡ ತಂಡವಾಗಿ ಉಪಹಾರಕ್ಕೆ ಕರೆದು ಅವರ ಕಷ್ಟಸುಖ ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ತೀರ್ಮಾನಕ್ಕೆ ಬಂದಿದ್ದಾರೆ.
ಅಷ್ಟೇ ಅಲ್ಲ, ಕಾನೂನುಬದ್ಧವಾಗಿ ವಿಧಾನಮಂಡಲದ, ಅದರಲ್ಲೂ ವಿಧಾನಸಭೆ ಸದಸ್ಯರು ಮಾಡಿದ ಮನವಿಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸುವಂತೆ ಮುಖ್ಯಕಾರ್ಯದರ್ಶಿಗಳು ಸೂಚಿಸಿದ್ದಾರೆ.
ಸರ್ಕಾರಕ್ಕೆ ಮುಜುಗರ
ಪಕ್ಷದ ಶಾಸಕರುಗಳು ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆಡಳಿತಶಾಹಿ ವಿರುದ್ಧ ತಿರುಗಿಬಿದ್ದಿರುವುದು ಪಕ್ಷ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.
ನವೆಂಬರ್ ವೇಳೆಗೆ ಮುಖ್ಯಮಂತ್ರಿ ಗಾದಿ ದೊರೆಯುತ್ತದೆ ಎಂಬ ವಿಶ್ವಾಸದಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಈಗಾಗಲೇ ಪಕ್ಷದ ಶಾಸಕರಿಗೆ ರಾಜಾತಿಥ್ಯ ನೀಡುತ್ತಿದ್ದಾರೆ.
ಕಳೆದ ಕೆಲವು ದಿನಗಳಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬರುವ ಶಾಸಕರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಅವರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕೊಡುವಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಅಹವಾಲುಗಳಿಗೆ ಸ್ಪಂದನೆ
ಶಾಸಕರ ಅಹವಾಲುಗಳಿಗೆ ಸ್ಪಂದಿಸಲು ವಿಶೇಷ ಅಧಿಕಾರಿಗಳನ್ನು ನೇಮಿಸಿದ್ದಾರೆ, ಈ ಮೊದಲು ತೀರಾ ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ.
ಈ ಮಧ್ಯೆ ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಪಕ್ಷದ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಕಷ್ಟಕ್ಕೆ ಸಿಲುಕಿತ್ತು, ಇದರಿಂದ ಪೂರ್ಣ ಅಭಿವೃದ್ಧಿ ಕಾರ್ಯಗಳು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ಹಿಂದಿನ ಬಿಜೆಪಿ ಆಡಳಿತದಲ್ಲಿ ಬೇಕಾಬಿಟ್ಟಿ ಕಾಮಗಾರಿ ಗುತ್ತಿಗೆಗಳನ್ನು ನೀಡಿ ಹಣವನ್ನೂ ಬಿಡುಗಡೆ ಮಾಡದೆ ಸ್ವೇಚ್ಛಾಚಾರದ ನಡೆಸಿದ್ದರಿಂದ ಇಂತಹ ಪರಿಸ್ಥಿತಿ ಎದುರಾಗಿತ್ತು.
ಜುಲೈನಿಂದಲೇ ಹಣ ಬಿಡುಗಡೆ
ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಅವರು, ಕಳೆದ ಎರಡು ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಯಶಸ್ವಿಯಾಗಿದ್ದಾರೆ, ಜುಲೈ ತಿಂಗಳಿನಿಂದಲೇ ಅಭಿವೃದ್ಧಿ ಹಣ ಬಿಡುಗಡೆ ಆಗಲಿದೆ.
ತ್ವರಿತವಾಗಿ ಕೆಲಸಗಳು ಆಗುತ್ತಿಲ್ಲ ಎಂಬುದಾಗಿ ನಮ್ಮ ಶಾಸಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆಯೇ ಹೊರತು ಆಡಳಿತ, ಸರ್ಕಾರ ಅಥವಾ ಮುಖ್ಯಮಂತ್ರಿ ವಿರುದ್ಧ ದಂಗೆ ಏಳುತ್ತಿಲ್ಲ, ಅವರುಗಳಿಗೆ ಅಭಿವೃದ್ಧಿ ಆಗಬೇಕೆಂಬುದಷ್ಟೇ ಮುಖ್ಯ ಉದ್ದೇಶವಾಗಿದ್ದು, ಅದಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಿದ್ದಾರೆ ಎಂದರು.


