ವಿದ್ಯಾರ್ಥಿಗಳಿಗೆ ಸಚಿವ ಮಧುಬಂಗಾರಪ್ಪ ದೀಪಾವಳಿ ಕೊಡುಗೆ
ಬೆಂಗಳೂರು:ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಪ್ರತಿ ವಿಷಯದಲ್ಲಿ ಶೇಕಡ 33 ಅಂಕ ಗಳಿಸಿದರೆ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇಕಡಾ 33 ಅಂಕಗಳನ್ನು ಪಡೆದು, ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನು ಗಳಿಸಿದಲ್ಲಿ, ಆಯಾ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡಾ 30 ಅಂಕ ಪಡೆದಂತಹ ವಿದ್ಯಾರ್ಥಿಯನ್ನು ಉತ್ತೀರ್ಣರೆಂದು ಘೋಷಿಸಲಾಗುತ್ತದೆ.
ಒಟ್ಟಾರೆ ಶೇಕಡಾ 33
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪ್ರತಿ ವಿಷಯದ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 30 ಅಂಕಗಳನ್ನು ಪಡೆಯಬೇಕು ಹಾಗೂ ಪ್ರತಿ ವಿಷಯದಲ್ಲೂ ಲಿಖಿತ ಮತ್ತು ಪ್ರಾಯೋಗಿಕ/ಆಂತರಿಕ ಅಂಕಗಳು ಸೇರಿ ಕನಿಷ್ಠ 30 ಅಂಕಗಳನ್ನು ಪಡೆದು ಒಟ್ಟಾರೆ ಶೇಕಡಾ 33 (600ಕ್ಕೆ 198) ಅಂಕಗಳನ್ನು ಪಡೆದ ವಿದ್ಯಾರ್ಥಿ ಉತ್ತೀರ್ಣರಾಗುತ್ತಾರೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿಗೊಳ್ಳಲಿದೆ, ಇದುವರೆಗೂ ಪ್ರತಿ ವಿಷಯದಲ್ಲಿ ಕನಿಷ್ಟ 35 ಅಂಕಗಳನ್ನು ಪಡೆಯಬೇಕಿತ್ತು.
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಮತ್ತು ವಿದ್ಯಾರ್ಥಿಗಳು ಅನುತ್ತೀರ್ಣರಾಗಿ ದಾರಿ ತಪ್ಪದಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
18,000 ಶಿಕ್ಷಕರ ನೇಮಕಾತಿ
ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ 18,000 ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆರಂಭಿಸುವುದಾಗಿ ಘೋಷಿಸಿದ ಸಚಿವರು, 800 ಸರ್ಕಾರಿ ಶಾಲೆಗಳನ್ನು 3,000 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಪರಿವರ್ತಿಸುವುದಾಗಿ ತಿಳಿಸಿದರು.
ಪ್ರತಿ ಪಬ್ಲಿಕ್ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮೂಲಸೌಕರ್ಯ ಕಲ್ಪಿಸುವ ಜೊತೆಗೆ ಶಿಕ್ಷಕರ ಕೊರತೆ ನೀಗಿಸಲು ದೊಡ್ಡ ಪ್ರಮಾಣದಲ್ಲಿ ನೇಮಕಾತಿಗೂ ಚಾಲನೆ ನೀಡಲಾಗಿದೆ.
ಸಿಬಿಎಸ್ಇ ಮತ್ತು ನೆರೆ ರಾಜ್ಯಗಳಲ್ಲಿ ಉತ್ತೀರ್ಣತೆ ಅಂಕಗಳಿಗೆ ಸಂಬಂಧಿಸಿದಂತೆ ಎಲ್ಲಾ ವಿಷಯಗಳಲ್ಲೂ ಹಾಗೂ ಪ್ರತಿ ವಿಷಯದಲ್ಲಿ ಕನಿಷ್ಟ ಶೇಕಡ 33ರಷ್ಟು ಅಂಕಗಳನ್ನು ಪಡೆಯಬೇಕೆಂಬ ಮಾನದಂಡಗಳನ್ನು ಅಳವಡಿಸಿಕೊಳ್ಳಲಾಗಿದೆ.
ಸುಧಾರಣಾ ಆಯೋಗ ವರದಿ
ಕರ್ನಾಟಕ ಆಡಳಿತ ಸುಧಾರಣಾ ಆಯೋಗದ 4ನೇ ವರದಿಯಲ್ಲೂ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಉತ್ತೀರ್ಣತಾ ಅಂಕಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಿದ್ದಾರೆ.
ಪ್ರಸ್ತುತ ಎರಡು ತರಗತಿಗಳಲ್ಲೂ ತೇರ್ಗಡೆಯಾಗಲು ಕನಿಷ್ಟ 35 ಅಂಕ ಪಡೆಯಬೇಕೆಂಬ ನಿಯಮವಿದೆ.
ಉತ್ತೀರ್ಣ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್ಇ ಹಾಗೂ ನೆರೆ ರಾಜ್ಯಗಳ ಉತ್ತೀರ್ಣ ಮಾನದಂಡವನ್ನು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೂ ಅನ್ವಯ ಆಗುವಂತೆ ಏಕರೂಪ ಪದ್ಧತಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೊಳಿಸಲಾಗುವುದು ಎಂದರು.
ಸಕಾರಾತ್ಮಕ ಪರಿಣಾಮ ಆಶಯ
ಈ ಬದಲಾವಣೆಯು ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಸಚಿವರು ತಿಳಿಸಿದರು.
ಪರಿವರ್ತಿತ ಪಬ್ಲಿಕ್ ಶಾಲೆಗಳಲ್ಲಿ ಪ್ರಾಥಮಿಕ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೇ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 2 ರಿಂದ 3 ಹಾಗೂ ಕಲ್ಯಾಣ ಕರ್ನಾಟಕಕ್ಕೆ 4 ರಿಂದ 5 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು ಎಂದರು.

