ಬೆಂಗಳೂರು:ಕೃತಕ ಬುದ್ಧಿಮತ್ತೆ (ಎಐ-ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ನಿಂದ ಕನ್ನಡ ಭಾಷೆಯನ್ನು ಹೊಸ ಸವಾಲಿಗೆ ತಕ್ಕಂತೆ ಸಿದ್ಧಪಡಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಆಚರಿಸುತ್ತಿರುವ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡವನ್ನು ಹೊಸ ತಂತ್ರಜ್ಞಾನ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಬೇಕು ಎಂದರು.
ಮಾಹಿತಿ ತಂತ್ರಜ್ಞಾನ ಯುಗ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಯುಗವಾಗಿ ಮಾರ್ಪಾಡಾಗುತ್ತಿದೆ, ಇದರಿಂದ ಉದ್ಯೋಗ ನಷ್ಟವಾಗುವುದೆಂಬ ಆತಂಕವೂ ಎದುರಾಗಿದೆ, ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವಲ್ಲಿ ಹೊಸ ನೀತಿ ತರುವ ಸಿದ್ಧತೆಯಲ್ಲಿದ್ದೇವೆ.
ಕರ್ನಾಟಕ ರಾಜ್ಯ ಉದಯ
1956ರಲ್ಲಿ ಏಕೀಕರಣ ನಂತರ ಕರ್ನಾಟಕ ರಾಜ್ಯ ಉದಯವಾಗಿ ನವೆಂಬರ್ 1, 2025ಕ್ಕೆ 69 ವರ್ಷ ಪೂರೈಸಿ 70ನೇ ವರ್ಷದಲ್ಲಿ ಮುನ್ನಡೆಯುತ್ತಿದೆ.
ಏಕೀಕರಣ ಹೋರಾಟದಲ್ಲಿ ಹುತಾತ್ಮರಾದ ಮೈಸೂರಿನ ವಿದ್ಯಾರ್ಥಿ ರಾಮಸ್ವಾಮಿ, ಬಳ್ಳಾರಿಯ ರಂಜಾನ್ ಸಾಬ್, ಏಕೀಕರಣ ಚಳುವಳಿ ಬೀಜ ಬಿತ್ತಿ, ಮುನ್ನಡೆಸಿದ ಆಲೂರು ವೆಂಕಟರಾಯರು, ಅಂದಾನಪ್ಪ ದೊಡ್ಡಮೇಟಿ, ಗುದ್ಲೆಪ್ಪ ಹಳ್ಳಿಕೇರಿ, ಸಿದ್ದಪ್ಪ ಕಂಬಳಿ, ಆರ್.ಎಚ್.ದೇಶಪಾಂಡೆ, ಕೌಜಲಗಿ ಶ್ರೀನಿವಾಸ ರಾವ್, ಕೆಂಗಲ್ ಹನುಮಂತಯ್ಯ ಮುಂತಾದ ಮಹನೀಯರ ಹೋರಾಟದ ಫಲವೆ ಇಂದಿನ ಕರ್ನಾಟಕ.
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ
’ಮನುಷ್ಯ ಜಾತಿ ತಾನೊಂದೇ ವಲಂ’ ಎಂದ ಆದಿಕವಿ ಪಂಪನಿಂದ ಇದುವರೆಗೂ ಕನ್ನಡ ಸಾಹಿತ್ಯ ಸಂಪತ್ತು ಸಾಕಷ್ಟು ಸಮೃದ್ಧಗೊಂಡಿದೆ, ಕನ್ನಡ ಭಾಷೆಗೆ ಶಾಸ್ತ್ರೀಯ ಭಾಷೆ ಸ್ಥಾನಮಾನವೂ ದೊರಕಿದೆ.
ಬಹು ಭಾಷೆ, ಬಹು ಧರ್ಮ, ಬಹು ಸಂಸ್ಕೃತಿ ಹಾಗೂ ಬಹು ಜನಾಂಗಗಳು ಒಟ್ಟುಗೂಡಿ ಬದುಕುವ ತತ್ವಗಳನ್ನು ನಮ್ಮ ಹಿರಿಯರು ಕಂಡುಕೊಂಡಿದ್ದು, ಎಲ್ಲರೂ ಒಟ್ಟಾಗಿ ಬಾಳಿ, ಬದುಕಿ ನಾಡನ್ನು ಕಟ್ಟಿ ನಿಲ್ಲಿಸಿ ಸಮೃದ್ಧಗೊಳಿಸಿದ್ದು, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಿದ್ದಾರೆ.
ಸಾವಿರಾರು ವರ್ಷಗಳ ಇತಿಹಾಸವುಳ್ಳ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಬೇಕಿದೆ, ಶಿಕ್ಷಣದಲ್ಲಿ ಕನ್ನಡ ಭಾಷೆ ನಿರ್ಲಕ್ಷ್ಯ ಹಲವು ಸಮಸ್ಯೆ ಹುಟ್ಟಿ ಹಾಕಿದೆ, ಜಗತ್ತಿನ ಮುಂದುವರೆದ ಭಾಷೆಗಳಿಗೆ ಎದುರಾಗದ ಬಿಕ್ಕಟ್ಟು ಕನ್ನಡ ಭಾಷೆಗೆ ಎದುರಾಗಿದೆ.
ಒಂದು ಲಕ್ಷ ಕೋಟಿ ರೂ. ಅನ್ಯಾಯ
ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯಿಂದ ಒಂದು ಲಕ್ಷ ಕೋಟಿ ರೂ.ಗೂ ಹೆಚ್ಚು ಅನ್ಯಾಯವಾಗಿದ್ದು, ಇದರ ವಿರುದ್ಧ ಸರ್ಕಾರ ಹೋರಾಟ ನಡೆಸುತ್ತಿದೆ, ಜನ ಸಮುದಾಯವೂ ಪ್ರಶ್ನಿಸಬೇಕಾದ ಅನಿವಾರ್ಯತೆ ಉದ್ಭವಿಸಿದೆ.
ಬಲಿಷ್ಠ ಒಕ್ಕೂಟ ವ್ಯವಸ್ಥೆ ಕನಸು ಸಂವಿಧಾನ ಪಿತೃಗಳದ್ದಾಗಿತ್ತು, ಆದರೆ, ಕಳೆದ ಕೆಲವು ವರ್ಷಗಳಿಂದ ರಾಜ್ಯಗಳ ಅಧಿಕಾರ ಕಬ್ಜಾ ಮಾಡುವ ವಸಾಹತುವಾದಿ ಮನೋಭಾವ ಕಾಣುತ್ತಿದೆ, ಕೇಂದ್ರದ ತಾರತಮ್ಯಗಳ ವಿರುದ್ಧ ಇಡೀ ನಾಡು ಪ್ರತಿಭಟಿಸದಿದ್ದರೆ ನಮ್ಮನ್ನು ಆಪೋಶನ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಕೇಂದ್ರದಲ್ಲಿನ ಒಕ್ಕೂಟ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಮಲತಾಯಿ ಧೋರಣೆ ತೋರುತ್ತಿದೆ, 4.5 ಲಕ್ಷ ಕೋಟಿ ರೂ.ಗಿಂತ ಹೆಚ್ಚಿನ ತೆರಿಗೆಯನ್ನು ಕರ್ನಾಟಕ ನೀಡುತ್ತಿದ್ದರೂ, ನಮಗೆ ಬಿಡಿಗಾಸು ಕೊಟ್ಟು ಪ್ರತಿ ವರ್ಷ ಸಾವಿರಾರು ಕೋಟಿ ರೂ. ವಂಚಿಸುತ್ತಿದೆ.
ಹಿಂದಿ ಭಾಷೆ ಹೇರಿಕೆ
ಹಿಂದಿ ಭಾಷೆ ಹೇರಿಕೆಗೆ ನಿರಂತರ ಹುನ್ನಾರ ನಡೆದಿದೆ, ಹಿಂದಿ, ಸಂಸ್ಕೃತ ಭಾಷೆ ಅಭಿವೃದ್ಧಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ, ಕನ್ನಡ ಸೇರಿದಂತೆ ಉಳಿದ ದೇಶಭಾಷೆಗಳನ್ನು ನಿರ್ಲಕ್ಷಿಸಲಾಗುತ್ತಿದೆ.
ರಾಜ್ಯದ ಅಭಿವೃದ್ಧಿ ಪೂರಕ ಯೋಜನೆಗಳನ್ನು ಕರ್ನಾಟಕಕ್ಕೆ ಕೊಡದೆ ವಂಚಿಸಲಾಗುತ್ತಿದೆ, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿದ್ದರೂ, ಅಗತ್ಯ ಅನುದಾನ ಕೊಡದೆ ಅನ್ಯಾಯ ಮಾಡಲಾಗುತ್ತಿದೆ.
ಕರ್ನಾಟಕ ವಿರೋಧಿ ನೀತಿಗಳನ್ನು ವಿರೋಧಿಸಲೇಬೇಕಿದೆ, ನಾಡಿನ ಇತಿಹಾಸ, ಪರಂಪರೆ ನೆನಪುಗಳನ್ನು ಅಭಿಮಾನವನ್ನು ಹೊಸ ತಲೆಮಾರಿಲ್ಲಿ ಮೂಡಿಸೋಣ, ನಮಗಿರುವ ಸವಾಲುಗಳನ್ನೇ ಅವಕಾಶವಾಗಿ ಮಾರ್ಪಡಿಸುವ ಶಕ್ತಿ ನಮ್ಮ ಯುವ ತಲೆಮಾರಿಗಿದೆ, ಇವರು ಎದ್ದು ನಿಂತು ಕನ್ನಡ ಮತ್ತು ಕರ್ನಾಟಕವನ್ನು ಜಗತ್ತಿನ ಮುಂದುವರೆದ ಸಮಾಜಗಳ ಮಟ್ಟಕ್ಕೆ ನಿಲ್ಲಿಸಬೇಕಿದೆ.
ಶಿಕ್ಷಣ ಬಲವರ್ಧನೆಗೆ 65,000 ಕೋಟಿ ರೂ.
ಶಿಕ್ಷಣ ಕ್ಷೇತ್ರದ ಬಲವರ್ಧನೆಗೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 65,000 ಕೋಟಿ ರೂ.ಗಳಿಗೂ ಹೆಚ್ಚಿನ ಸಂಪನ್ಮೂಲ ವಿನಿಯೋಗಿಸಲಾಗುತ್ತಿದೆ, ವಸತಿ ಶಾಲೆ, ವಸತಿ ನಿಲಯಗಳಲ್ಲಿ 8.36 ಲಕ್ಷಕ್ಕೂ ಹೆಚ್ಚು ಮಕ್ಕಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ, ಅಗತ್ಯ ಇರುವೆಡೆ ಹೊಸ ವಸತಿ ಶಾಲೆ, ವಸತಿ ನಿಲಯಗಳನ್ನು ಸ್ಥಾಪಿಸಲಾಗುತ್ತಿದೆ.
ಕ್ಯಾನ್ಸರ್ ಪೀಡಿತ ಮಕ್ಕಳಿಗೆ ಪ್ರತ್ಯೇಕ ವಸತಿ ಶಾಲೆ ಪ್ರಾರಂಭಿಸಲಾಗಿದೆ, ಕ್ಯಾನ್ಸರ್ ಬಾಧಿತ ಮಕ್ಕಳಿಗೆ ವೈದ್ಯಕೀಯ ಬೆಂಬಲದೊಂದಿಗೆ ಶಿಕ್ಷಣವನ್ನೂ ಒದಗಿಸುವ ಕೆಲಸ ಮಾಡಲಾಗುತ್ತಿದೆ.
ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿ ನಡೆಸಲಾಗುತ್ತಿದೆ, 2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ 5,000 ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ, 800 ಹೊಸ ಪಿಯು ಉಪನ್ಯಾಸಕರ ನೇಮಕಾತಿ ಮಾಡಲಾಗಿದೆ, 18,000ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ, ಅನುದಾನಿತ ಶಾಲೆಗಳಿಗೆ 5,000 ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅನುಮತಿ ನೀಡಲಾಗಿದೆ.
ಪ್ರತ್ಯೇಕ ಶಿಕ್ಷಣ ನೀತಿ ರಚನೆ
ಪ್ರೊ.ಸುಖ್ದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರಚನೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಜೊತೆಗೆ ಮಕ್ಕಳ ಬದುಕು ರೂಪುಗೊಳ್ಳಲು ಪೋಷಕರ ಪಾತ್ರವೂ ಮಹತ್ವದ್ದಾಗಿದೆ, ಹೊಸ ತಲೆಮಾರು ಸಂಕಷ್ಟಗಳನ್ನು ಎದುರಿಸುತ್ತಿದೆ, ಮೊಬೈಲ್ ಫೋನ್, ಇಂಟರ್ನೆಟ್ಟು, ಆರ್ಟಿಫೀಷಿಯಲ್ ಇಂಟೆಲಿಜೆನ್ಸ್ ಎರಡು ಅಲಗಿನ ಖಡ್ಗದಂತೆ ಆಗಿವೆ.
ಮುಖ್ಯ ಗುರಿ ಮತ್ತು ಧ್ಯೇಯ
ರಾಜ್ಯ ಸರ್ಕಾರ ಗಿಗ್ ಎಕಾನಮಿ, ಗ್ರೀನ್ ಎಕಾನಮಿ, ಗ್ಯಾರಂಟಿ ಎಕಾನಮಿ, ಗ್ಲೋಬ್ ಟ್ರೋಟಿಂಗ್ ಎಕಾನಮಿ (ಪ್ರವಾಸೋದ್ಯಮ ಆರ್ಥಿಕತೆ), ಗುಡ್ ಗವರ್ನೆನ್ಸ್, ಜಿಯೊಗ್ರಾಫಿಕಲ್ ಈಕ್ವಾಲಿಟಿ (ಪ್ರಾದೇಶಿಕ ಸಮಾನತೆ), ಗುಡ್ ಹೆಲ್ತ್ ಟು ಆಲ್ ಪೀಪಲ್, ಜೆಂಡರ್ ಈಕ್ವಾಲಿಟಿ, ಗುಡ್ ಪಬ್ಲಿಕ್ ಎಜುಕೇಶನ್, ಗುಡ್ ಕನೆಕ್ಟಿವಿಟಿ ಮುಂತಾದ 10-ಜಿಗಳನ್ನು ಮುಖ್ಯ ಗುರಿ ಮತ್ತು ಧ್ಯೇಯವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ.
ಇದರಿಂದಾಗಿ ಕರ್ನಾಟಕ ಉದಯಿಸುತ್ತಿದ್ದು, ’ದಿ ರೈಸಿಂಗ್ ಕರ್ನಾಟಕ’ ಕುರಿತು ವಿಶ್ವ ಸಂಸ್ಥೆ ಮುಖ್ಯಸ್ಥ ಫಿಲೆಮಾನ್ ಯಾಂಗ್ ಶ್ಲಾಘಿಸಿರುವುದು, ನಮಗೆ ಹೆಮ್ಮೆ ತಂದಿದೆ, ಜೊತೆಗೆ ಜವಾಬ್ದಾರಿಯನ್ನೂ ಹೆಚ್ಚಿಸಿದೆ.
ಕರ್ನಾಟಕ ಕುರಿತು ಹೇಳುವಾಗ ಬೆಂಗಳೂರು, ಐಟಿಬಿಟಿ ನೆನಪಾಗುತ್ತದೆ, ದೇಶದಲ್ಲಿ ತಂತ್ರಜ್ಞಾನ ಆಧಾರಿತ ವಿದೇಶಿ ನೇರ ಬಂಡವಾಳ ಸೆಳೆಯುವಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿದೆ, ರಾಜ್ಯದಲ್ಲಿ ದೇಶದ ಶೇ.೬೦ರಷ್ಟು ಬಯೋಟೆಕ್ನಾಲಜಿ ಕಂಪನಿಗಳಿವೆ, ಬಯೋಟೆಕ್ನಾಲಿಜಿ ಕ್ಷೇತ್ರ ರಫ್ತಿಗೆ ರಾಜ್ಯ ಶೇ.50ರಷ್ಟು ಕೊಡುಗೆ ನೀಡುತ್ತಿದೆ.
ಮಾನವೀಯತೆಯ ನಾಡು ಕಟ್ಟಬೇಕಿದೆ
ಹೊಸ ತಲೆಮಾರಿನ ಮೇಲೆ ನಾಡನ್ನು ಮುನ್ನಡೆಸುವ ಮತ್ತು ಸಮೃದ್ಧಗೊಳಿಸುವ ಮಹತ್ತರ ಜವಾಬ್ದಾರಿಯಿದ್ದು, ವೈಜ್ಞಾನಿಕ, ವೈಚಾರಿಕ ಮನೋಭಾವ, ಮಾನವೀಯತೆಯ ನಾಡು ಕಟ್ಟಬೇಕಿದೆ.
ಯುರೋಪ್ನ ಸ್ಕ್ಯಾಂಡಿನೇವಿಯನ್ ದೇಶಗಳಂತೆ ವಿಶ್ವ ತಳಹದಿಯ ಆದಾಯ (ಯೂನಿವರ್ಸಲ್ ಬೇಸಿಕ್ ಇನ್ಕಂ) ಪರಿಕಲ್ಪನೆಯಡಿ ಜನರ ಖಾತೆಗಳಿಗೆ ನೇರ ಹಣ ವರ್ಗಾಯಿಸಲಾಗುತ್ತಿದೆ.
ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ತರಲಾಗಿದೆ, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಕ್ರಾಂತಿಕಾರಕ ರೀತಿಯಲ್ಲಿ ಬದಲಾಗುತ್ತಿದೆ, ರಸ್ತೆಗಳ ನಿರ್ಮಾಣ, ವಿದ್ಯುತ್ ಉತ್ಪಾದನೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ, ರೈತರ ಮಾರುಕಟ್ಟೆ ವ್ಯವಸ್ಥೆ, ಕೈಗಾರಿಕೆಗಳ ಸ್ಥಾಪನೆ ಮತ್ತು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ.

