ಬೆಂಗಳೂರು: ಅಧಿಕಾರದಲ್ಲಿ ಮುಂದುವರೆಯಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯ ಅವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡುತ್ತಿರುವ ರಾಜಣ್ಣ ಅವರು, ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಕಾಂಗ್ರೆಸ್ ನಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ನೀಡಿದರು.
ರಾಹುಲ್ ಗಾಂಧಿ ಅವರ ಮಾತಿಗೆ ಮಣಿದು ಸಿದ್ದರಾಮಯ್ಯ ಅವರು ಅಧಿಕಾರ ತ್ಯಾಗ ಮಾಡಿದರೆ, ದಲಿತ ನಾಯಕರೊಬ್ಬರು ಮುಖ್ಯಮಂತ್ರಿಯಾಗುತ್ತಾರೆಂದು ಭವಿಷ್ಯ ನುಡಿದರು.
ನಾಯಕತ್ವ ಬದಲಾವಣೆ ಆಗದಿದ್ದರೆ, ದೊಡ್ಡ ಪ್ರಮಾಣದಲ್ಲಿ ಸಂಪುಟ ಸರ್ಜರಿಯಾಗಲಿದ್ದು, ಆಡಳಿತ ಯಂತ್ರಕ್ಕೆ ವೇಗ ಕೊಡುವ ಕೆಲಸವಾಗುತ್ತದೆ ಎಂದಿದ್ದಾರೆ.
ಈ ನಡುವೆ ದೆಹಲಿಯಲ್ಲೇ ಬಿಡಾರ ಹೂಡಿರುವ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸೇರಿದಂತೆ ಪ್ರಮುಖ ನಾಯಕರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ಬದಲಾವಣೆ ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಹೇಳಿದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು.
ಒಂದು ವೇಳೆ ನಾಯಕತ್ವ ಬದಲಾವಣೆ ಮಾಡುವುದೇ ಆದರೆ, ಸಿದ್ದರಾಮಯ್ಯ ಅವರು ಹೇಳಿದವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದಾಗದಿದ್ದರೆ, ಸರ್ಕಾರ ಅಸ್ಥಿರಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ.
ಅಧಿಕಾರ ಹಸ್ತಾಂತರ ಗೊಂದಲದಿಂದ ಅಧಿಕಾರಿಗಳು ಯಾವ ಸಚಿವರ ಮಾತನ್ನು ಕೇಳುತ್ತಿಲ್ಲ. ಆಡಳಿತ ನಮ್ಮ ಹಿಡಿತ ತಪ್ಪಿದೆ.
ತಕ್ಷಣವೇ, ಈ ಗೊಂದಲಕ್ಕೆ ತಿಲಾಂಜಲಿ ನೀಡಿ ಹಳಿ ತಪ್ಪಿರುವ ಆಡಳಿತವನ್ನು ಸರಿಪಡಿಸುವ ಜವಾಬ್ದಾರಿ ನಿಮ್ಮದು ಎಂದು ವರಿಷ್ಠರ ಬಳಿ ಸಚಿವದ್ವಯರು ರಾಜ್ಯದ ಪರಿಸ್ಥಿಯನ್ನು ವಿವರಿಸಿದ್ದಾರೆ.
ಮೇ ಮಧ್ಯ ಭಾಗದ ವೇಳೆಗೆ ನಾಯಕತ್ವ ಬದಲಾವಣೆ ಆಗಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರು ದೆಹಲಿಯಲ್ಲಿ ಬಿರುಸಿನ ಲಾಭಿ ಮಾಡುತ್ತಿದ್ದಾರೆ.
ಮತ್ತೊಂದೆಡೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು, ನಾಳೆ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿದ್ದು, ಅವರು ಸಹ ಇದೇ ವಿಚಾರದಲ್ಲಿ ವರಿಷ್ಠರೊಂದಿಗೆ ಸಮಾಲೋಚನೆ ಮಾಡಲಿದ್ದಾರಂತೆ.


