ನವದೆಹಲಿ:ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮರುದಿನವೇ ಕರ್ನಾಟಕ ಕಾಂಗ್ರೆಸ್ನಲ್ಲಿನ ಗೊಂದಲ ಪರಿಹಾರವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಸಾಧ್ಯತೆ ಸುಳಿವು ಹಿನ್ನೆಲೆಯಲ್ಲಿ, ಅವರನ್ನೇ ಮುಂದುವರೆಸುವಂತೆ ಮನವಿ ಮಾಡಲು ದಲಿತ ಸಮುದಾಯದ ಸಚಿವರು ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ ಸಂದರ್ಭದಲ್ಲಿ ಈ ಸಂದೇಶ ನೀಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಬಗ್ಗೆ ಚರ್ಚೆ
ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಪ್ರವಾಸದ ನಂತರ ಶುಕ್ರವಾರ ದೆಹಲಿಗೆ ಹಿಂತಿರುಗಲಿದ್ದು, ಕರ್ನಾಟಕ ಕಾಂಗ್ರೆಸ್ ಬಗ್ಗೆ ಚರ್ಚಿಸುತ್ತೇವೆ.
ಮೇ 4ರ ನಂತರ ಹೈಕಮಾಂಡ್ ನಿರ್ಧಾರ ಪ್ರಕಟಿಸುವುದಾಗಿ ಖರ್ಗೆ ತಮ್ಮನ್ನು ಭೇಟಿ ಮಾಡಿದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಅವರಿಗೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಬದಲಾವಣೆ ನಿಶ್ಚಿತ ಎಂದಾದರೆ, ನೀವು ರಾಜ್ಯದ ಉಸ್ತುವಾರಿ ವಹಿಸಿಕೊಳ್ಳಿ ಎಂದು ಮತ್ತೆ ಆಹ್ವಾನ ನೀಡಿದ್ದಾರೆ.
ದಲಿತ ಮುಖ್ಯಮಂತ್ರಿ ಮನವಿ
ದಲಿತರೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ದೊರೆತರೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಕಾರಾತ್ಮಕ ಸಂದೇಶ ರವಾನೆ ಆಗುವುದಲ್ಲದೆ, ಕಾಂಗ್ರೆಸ್ ಮತ್ತಷ್ಟು ಬಲಗೊಳ್ಳುತ್ತದೆ.
ನಾಯಕತ್ವ ಬದಲಾವಣೆ ಆಗುವುದೇ ಆದರೆ, ನೀವು ಅಥವಾ ಇನ್ನೊಬ್ಬ ದಲಿತ ನಾಯಕರನ್ನೇ ಆರಿಸಿ ಎಂದಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದಲ್ಲಿ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಏನೆಲ್ಲಾ ಬದಲಾವಣೆ ಆಗಬಹುದು ಎಂಬ ಸುಳಿವು ನೀಡಿದ್ದಾರೆ.
ನಮ್ಮ ಹಿತ ಕಾಪಾಡಿ
ಒಂದು ವೇಳೆ ಮಂತ್ರಿಮಂಡಲ ಪುನರ್ ರಚನೆ ತೀರ್ಮಾನ ಕೈಗೊಂಡರೆ, ನಮ್ಮ ಹಿತ ಕಾಪಾಡಿ ಎಂದೂ ಮನವಿ ಮಾಡಿದ್ದಾರೆ.
ಕಳೆದ ಮೂರು ದಿನಗಳಿಂದ ದೆಹಲಿಯಲ್ಲೇ ಬಿಡಾರ ಹೂಡಿರುವ ಮೂವರು ಸಚಿವರು, ಖರ್ಗೆ ಅವರನ್ನಷ್ಟೇ ಅಲ್ಲದೆ, ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರುಗಳನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಚಾಮರಾಜನಗರ ಸಂಸದ ಅನಿಲ್ ಬೋಸ್ ಅವರ ದೆಹಲಿ ನಿವಾಸದಲ್ಲಿ ಈ ಸಚಿವರು ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಲ್ಲದೆ, ಮರುದಿನ ಬೆಳಗ್ಗೆಯೂ ಅಲ್ಲಿಯೇ ಮಾತುಕತೆ ಮುಂದುವರೆಸಿದ್ದರು. ಈ ವೇಳೆ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸಹಾ ಉಪಸ್ಥಿತರಿದ್ದರು.
ಸಮಾವೇಶಕ್ಕೆ ಸಿದ್ಧತೆ
ದಲಿತರಿಗೆ ಒಳ ಮೀಸಲಾತಿ ಕಲ್ಪಿಸಿರುವ ಹಿನ್ನೆಲೆಯಲ್ಲಿ ದಾವಣಗೆರೆ ಅಥವಾ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲು ಈ ನಾಯಕರು ನಿರ್ಧರಿಸಿದ್ದಾರೆ.
ಸಮಾವೇಶದಲ್ಲಿ ಕಾಂಗ್ರೆಸ್ ನಮಗೆ ಒಳ ಮೀಸಲಾತಿ ಕಲ್ಪಿಸಿದೆ, ಇದೀಗ ಮುಖ್ಯಮಂತ್ರಿ ಸ್ಥಾನಕ್ಕೆ ದಲಿತ ವ್ಯಕ್ತಿಯ ಆಯ್ಕೆಗೆ ಒತ್ತಾಯಿಸಿ ನಿರ್ಣಯ ಕೈಗೊಂಡು ವರಿಷ್ಠರಿಗೆ ರವಗಾನಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ.
ಕಾಂಗ್ರೆಸ್ ವತಿಯಿಂದಲೇ ಸಮಾವೇಶ ನಡೆಸುವುದಾಗಿ ತಿಳಿಸಿರುವ ನಾಯಕರು, ಇದನ್ನು ತಡೆಯುವ ಪ್ರಯತ್ನ ಮಾಡದಂತೆ ನೋಡಿಕೊಳ್ಳಬೇಕೆಂದು ಕೋರಿದ್ದಾರೆ.


