ಬೆಂಗಳೂರು: ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ ನಲ್ಲಿ ಕಳೆದ ಕೆಲವಾರು ತಿಂಗಳಿನಿಂದ ನಡೆಯುತ್ತಿದ್ದ ಹಗ್ಗ ಜಗ್ಗಾಟಕ್ಕೆ ತೆರೆ ಎಳೆಯಲು ಮುಂದಾಗಿರುವ ಹೈಕಮಾಂಡ್ ಅಧಿಕಾರ ತ್ಯಾಗಕ್ಕೆ ಸಿದ್ದರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿದೆ.
ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಮುಗಿದ ನಂತರ ಹೈಕಮಾಂಡ್ ಈ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟಿಸಲಿದೆ. ಇಲ್ಲವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರ ತ್ಯಾಗದ ತೀರ್ಮಾನ ಪ್ರಕಟಿಸಲಿದ್ದಾರೆ. ಅದಾದ ಬಳಿಕ ಪರ್ಯಾಯ ನಾಯಕ ಯಾರು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಮೇ 29 ರಂದು ರಾಜೀನಾಮೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷ ಪೂರ್ಣಗೊಳಿಸಿದ ಬೆನ್ನೆಲ್ಲೇ ಅಧಿಕಾರ ಹಸ್ತಾಂತರ ಮತ್ತು ಸಂಪುಟ ಪುನಾರಚನೆ ವಿಚಾರಗಳು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದವು. ಇದರಿಂದ ಸರ್ಕಾರ ಮತ್ತು ಪಕ್ಷ ಸಂಘಟನೆ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡಿದ್ದಾರೆ.
ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಆಹ್ವಾನಿಸಿದ ರಾಹುಲ್ ಗಾಂಧಿ ಮೊದಲಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ರಾಜ್ಯ ಕಾಂಗ್ರೆಸ್ ವಿದ್ಯಮಾನಗಳ ಕುರಿತು ಸುದೀರ್ಘ ಮಾತುಕತೆ ನಡೆಸಿದರು.
ಈ ವೇಳೆ ಸುರ್ಜೇವಾಲಾ ಅವರು ರಾಜ್ಯ ಸರ್ಕಾರದ ಸಾಧನೆಗಳು ಆಡಳಿತ ವಿರೋಧಿ ಅಲೆ ಕುರಿತಂತೆ ಹಲವಾರು ವಿಚಾರಗಳ ಬಗ್ಗೆ ವರದಿ ಸಲ್ಲಿಸಿದ್ದಾರೆ. ಇದರ ಜೊತೆಯಲ್ಲಿಯೇ ಪಕ್ಷ ಸಂಘಟನೆಯ ಕುರಿತಾಗಿಯೂ ಸಮಗ್ರ ವರದಿ ನೀಡಿದ್ದಾರೆ. ಜೊತೆಗೆ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಯಾರನ್ನು ಅಭ್ಯರ್ಥಿಗಳನ್ನಾಗಿ ಮಾಡಬೇಕು ಎಂಬ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಅಭಿಪ್ರಾಯಗಳನ್ನು ವರದಿ ರೂಪದಲ್ಲಿ ನೀಡಿದ್ದಾರೆ.
ಈ ವರದಿಯನ್ನು ಪರಾಮರ್ಶಿಸಿದ ರಾಹುಲ್ ಗಾಂಧಿ ನಂತರ ಎಐಸಿಸಿ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಅವರೊಂದಿಗೆ ವರದಿಯ ಕುರಿತಾಗಿ ಚರ್ಚೆ ನಡೆಸಿದರು. ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸುಧೀರ್ಘ ಸಮಾಲೋಚನೆ ನಡೆಸಿದರು. ಬಳಿಕ ಈ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲ್ಗೊಂಡರು.
ಅಧಿಕಾರ ತ್ಯಾಗ:
ಇದಾಗ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ರಾಹುಲ್ ಗಾಂಧಿ ಅವರು ಅರ್ಧ ಗಂಟೆಗೂ ಹೆಚ್ಚು ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಈ ವೇಳೆ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಕೈಗೊಂಡ ನಿರ್ಧಾರಗಳನ್ನು ಶ್ಲಾಘಿಸಿದ ರಾಹುಲ್ ಗಾಂಧಿ ದೇಶದ ಹಿಂದುಳಿದ ವರ್ಗಗಳ ಅತ್ಯಂತ ಪ್ರಭಾವಿ ನಾಯಕರಾಗಿರುವ ತಾವು ರಾಷ್ಟ್ರ ರಾಜಕಾರಣಕ್ಕೆ ಬರಬೇಕು. ಈ ಮೂಲಕ ಹಿಂದುಳಿದ ವರ್ಗಗಳನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷಕ್ಕೆ ಭದ್ರವಾದ ಬುನಾದಿ ಹಾಕಿ ಕೊಡಬೇಕು. ಇದಕ್ಕೆ ಒಪ್ಪಿದರೆ ತಮ್ಮನ್ನು ರಾಜ್ಯಸಭೆಯ ಸದಸ್ಯರನ್ನಾಗಿ ನೇಮಕ ಮಾಡಿ ಪಕ್ಷದಲ್ಲಿ ಉನ್ನತ ಹುದ್ದೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಆದರೆ ಇದಕ್ಕೆ ಒಪ್ಪದ ಸಿದ್ದರಾಮಯ್ಯ ಅವರು ತಮಗೆ ರಾಷ್ಟ್ರ ರಾಜಕಾರಣದಲ್ಲಿ ಯಾವುದೇ ಆಸಕ್ತಿ ಇಲ್ಲ. ಹೈಕಮಾಂಡ್ ಬಯಸಿದರೆ ತಾವು ಮುಖ್ಯಮಂತ್ರಿಯಾಗಿ ಆಡಳಿತ ಅವಧಿ ಪೂರ್ಣಗೊಳಿಸುತ್ತೇನೆ. ಜೊತೆಗೆ ಮುಂದಿನ ಬಾರಿಯೂ ಕಾಂಗ್ರೆಸ್ ನೇತೃತ್ವದ ಸರ್ಕಾರ ತಂದುಕೊಡುತ್ತೇನೆ. ತನಗೆ ನೀಡಿದ ಅವಕಾಶದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ್ದೇನೆ. ಪಕ್ಷ ಮತ್ತು ಸರ್ಕಾರಕ್ಕೆ ಹೊಸ ವರ್ಚಸ್ಸು ತಂದುಕೊಡಲು ಪ್ರಯತ್ನ ನಡೆಸಿದ್ದೇನೆ. ತಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪಗಳು ಕೇಳಿಬಂದಿಲ್ಲ. ಯಾವುದೇ ಮಂತ್ರಿಗಳು, ಶಾಸಕರು ತಮ್ಮ ವಿರುದ್ಧ ಬಂಡಾಯ ಅಥವಾ ಭಿನ್ನಮತ ವ್ಯಕ್ತಪಡಿಸಿಲ್ಲ. ಹೀಗಾಗಿ ಹೈಕಮಾಂಡ್ ಅವಕಾಶ ನೀಡಿದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಪುಟ ಪುನರಾಚನೆ ಮಾಡಿ, ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕೆ ರಾಹುಲ್ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದರಾದರೂ ಕಾಂಗ್ರೆಸ್ ಪಕ್ಷ ತಮಗೆ ಎಲ್ಲ ರೀತಿಯ ಅವಕಾಶವನ್ನು ನೀಡಿದೆ. ಕರ್ನಾಟಕದಲ್ಲಿ ದಾಖಲೆ ಮುಖ್ಯಮಂತ್ರಿ ಆಗಿ ಕೆಲಸ ಮಾಡಲು ಮತ್ತು ದಾಖಲೆ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿದೆ. ಪಕ್ಷ ನೀಡಿದ ಅವಕಾಶದಲ್ಲಿ ತಾವು ಅತ್ಯುತ್ತಮವಾಗಿ ಕೆಲಸ ಮಾಡಿದ್ದೀರಿ ಇದಕ್ಕಾಗಿ ಪಕ್ಷ ಹೆಮ್ಮೆ ಪಡುತ್ತದೆ. ಆದರೆ, ಈಗ ಪಕ್ಷದ ಹಿತ ದೃಷ್ಟಿಯಿಂದ ತಾವು ಅಧಿಕಾರ ತ್ಯಾಗ ಮಾಡಬೇಕಾಗುತ್ತದೆ. ಕರ್ನಾಟಕ ಮತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ದೃಷ್ಟಿಯಿಂದ ಹೈಕಮಾಂಡ್ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಅದಕ್ಕೆ ಅವಕಾಶ ನೀಡುವ ದೃಷ್ಟಿಯಿಂದ ತಾವು ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
ತಾವು ಅಧಿಕಾರ ತ್ಯಜಿಸಿದ ನಂತರ ನಿಮ್ಮ ಸ್ಥಾನಕ್ಕೆ ಯಾರನ್ನು ನೇಮಕ ಮಾಡಬೇಕು ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಈ ತೀರ್ಮಾನ ಪಕ್ಷಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ವರ್ಚಸ್ಸು ತಂದು ಕೊಡಲಿದೆ ಎಂಬ ವಿಶ್ವಾಸವಿದೆ. ಹೀಗಾಗಿ ತಾವು ಯಾವುದೇ ರೀತಿಯ ಗೊಂದಲ ಮತ್ತು ಆಪಸ್ವರಗಳಿಗೆ ಅವಕಾಶವಿಲ್ಲದೆ ಗೌರವಯುತವಾಗಿ ಅಧಿಕಾರ ತ್ಯಾಗ ಮಾಡಬೇಕು. ಇದನ್ನು ತಮ್ಮಿಂಧ ಹೈಕಮಾಂಡ್ ಬಯಸುತ್ತಿದೆ ಎಂದು ಹೇಳಿದ್ದಾರೆ.
ತಾವು ರಾಜ್ಯಸಭೆಯ ಸದಸ್ಯರಾಗಲು ಬಯಸುವುದಾದರೆ ಪಕ್ಷ ಮುಕ್ತವಾಗಿದೆ ಈ ಬಗ್ಗೆ ಮತ್ತೊಮ್ಮೆ ಆಲೋಚನೆ ಮಾಡಿ. ಇಲ್ಲವಾದರೆ ರಾಜ್ಯಸಭೆ ಚುನಾವಣೆ ಮುಗಿದ ತಕ್ಷಣವೇ ಅಧಿಕಾರ ತ್ಯಾಗ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ. ಕರ್ನಾಟಕದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯನ್ನು ನಿಮ್ಮ ನೇತೃತ್ವದಲ್ಲಿಯೇ ಎದುರಿಸಬೇಕು ಎಂದು ಪಕ್ಷ ಬಯಸಿದೆ ಸೋನಿಯಾ ಗಾಂಧಿ ಅವರ ಆಶಯ ಕೂಡ ಇದೆ ಆಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅಲ್ಲದೆ ಪಕ್ಷದ ರಾಜ್ಯ ಘಟಕ ನೀಡಿರುವ ವಿಧಾನಪರಿಷತ್ ಮತ್ತು ರಾಜ್ಯಸಭೆಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಪರಿಶೀಲಿಸಲಿದೆ. ಉಳಿದ ರಾಜ್ಯಗಳ ಅಭ್ಯರ್ಥಿಗಳ ಆಯ್ಕೆ ಅಂತಿಮ ಗೊಳಿಸಿದ ನಂತರ ಇವುಗಳನ್ನು ಪರಿಶೀಲಿಸಿ ನಿರ್ಧಾರ ಪ್ರಕಟಿಸಲಿದೆ ಎಂದು ಹೇಳಿ ರಾಹುಲ್ ಗಾಂಧಿ ಹೊರ ನಡೆದಿದ್ದಾರೆ.
ಬಳಿಕ ತಮ್ಮ ತಾಯಿ ಹಾಗೂ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆಯ ಸಂಪೂರ್ಣ ವಿವರಗಳನ್ನು ನೀಡಿದ್ದಾರೆ. ಈ ವೇಳೆ ಅವರು ಸಿದ್ದರಾಮಯ್ಯ ಅವರನ್ನು ಅಧಿಕಾರ ತ್ಯಜಿಸುವಂತೆ ನೀಡಿರುವ ಸೂಚನೆಗೆ ಸಹಮತ ವ್ಯಕ್ತಪಡಿಸಿದ್ದು, ಇವರ ನಂತರದ ಸ್ಥಾನಕ್ಕೆ ಆಯ್ಕೆ ಮಾಡುವ ವ್ಯಕ್ತಿಯಿಂದ ಪಕ್ಷಕ್ಕೆ ದೇಶದಲ್ಲಿ ದೊಡ್ಡಮಟ್ಟದ ಹೆಸರು ಸಿಗಬೇಕು. ಆ ರೀತಿಯಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ತಿಳಿದುಬಂದಿದೆ.
ತಮ್ಮ ತಾಯಿ ನೀಡಿದ ಸಲಹೆಯೊಂದಿಗೆ ಮತ್ತೆ ಕಾಂಗ್ರೆಸ್ ಭವನಕ್ಕೆ ಬಂದ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರ ಜೊತೆ ಮಾತುಕತೆ ನಡೆಸಿ ಅಧಿಕಾರ ತ್ಯಾಗ ಕುರಿತಂತೆ ತಾವು ನೀಡಿರುವ ಅಭಿಪ್ರಾಯಕ್ಕೆ ಸೋನಿಯಾ ಗಾಂಧಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಬೆಳಗ್ಗೆಯಿಂದ ನಡೆಯುತ್ತಿದ್ದ ಸರಣಿ ಸಭೆಗಳು ಮುಕ್ತಾಯಗೊಂಡಿವೆ.
ನಾಯಕತ್ವ ಚರ್ಚೆ ಇಲ್ಲ:
ಇದಾದ ಬಳಿಕ ಹೇಳಿಕೆಯೊಂದನ್ನು ನೀಡಿದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಹೈ ಕಮಾಂಡ್ ಯಾವುದೇ ರೀತಿಯ ಚರ್ಚೆ ಅಥವಾ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಕುರಿತಾಗಿ ಮಾಧ್ಯಮಗಳ ಯಾವುದೇ ಪ್ರಶ್ನೆಗೆ ಉತ್ತರ ನೀಡುವುದಿಲ್ಲ ಎಂದು ಷರತ್ತು ವಿಧಿಸಿ ಮಾತನಾಡಿದ ಅವರು, ಬೆಳಗ್ಗೆಯಿಂದ ಸಂಜೆಯವರೆಗೆ ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿದ್ದೇವೆ ಇತರೆ ರಾಜ್ಯಗಳ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡ ನಂತರ ಕರ್ನಾಟಕದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಅಭ್ಯರ್ಥಿಗಳ ಹೆಸರನ್ನು ಒಂದೇ ಬಾರಿಗೆ ಪ್ರಕಟಿಸಲಿದೆ ಎಂದು ಹೇಳಿದರು.
ನಾಯಕತ್ವ ಬದಲಾವಣೆ ಮತ್ತು ಮಂತ್ರಿಮಂಡಲ ಪುನಾರಚನೆ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳ ಬಗ್ಗೆ ತಾವು ಯಾವುದೇ ಸ್ಪಷ್ಟನೆ ನೀಡುವುದಿಲ್ಲ ಎಲ್ಲವೂ ಕೇವಲ ಊಹಾಪೋಹ ಎಂದು ಹೇಳಿ ಹೊರಟರು.
ಸಿ.ಎಂ.ಸಭೆ:
ಇದರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿರುವ ಕೆ.ಜೆ. ಜಾರ್ಜ್ ಅವರ ನಿವಾಸಕ್ಕೆ ತೆರಳಿ ತಮ್ಮ ಆಪ್ತ ಮಂತ್ರಿಗಳಾದ ಎಂಬಿ ಪಾಟೀಲ್, ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೈರತಿ ಸುರೇಶ್ ಸೇರಿದಂತೆ ಕೆಲವು ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.
ರಾಹುಲ್ ಗಾಂಧಿ ಜೊತೆಗಿನ ತಮ್ಮ ಚರ್ಚೆಯ ವಿವರಗಳನ್ನು ಅವರಿಗೆ ನೀಡಿದ ಸಿಎಂ, ಮುಂದೆ ತಾವು ಕೈಗೊಳ್ಳಬೇಕಾದ ನಿರ್ಧಾರಗಳ ಕುರಿತಂತೆ ಅಭಿಪ್ರಾಯ ಆಲಿಸಿದರು ಎಂದು ಗೊತ್ತಾಗಿದೆ.


