ಇಲಾಖಾ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೂಚನೆ
ಬೆಂಗಳೂರು:ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾದ ಸೂಪರ್ ಎಲ್-ನೀನೋ ಪರಿಣಾಮದಿಂದ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಲಿದೆ ಎಂದು ಕಂದಾಯ ಸಚಿವಾಲಯ ಹೊಣೆ ಹೊತ್ತಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಎಚ್ಚರಿಸಿದ್ದಾರೆ.
ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸೂಪರ್ ಎಲ್-ನೀನೋದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.
ನೀರು ಪೋಲು ಮಾಡಬೇಡಿ
ಮಳೆ ಕೊರತೆಯಿಂದ ಕೃಷಿ ಮತ್ತು ಕುಡಿಯುವ ನೀರಿಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ, ಜಲಾಶಯಗಳಲ್ಲಿನ ಸಂಗ್ರಹಿತ ನೀರು ಪೋಲು ಮಾಡದೆ, ಕುಡಿಯುವ ನೀರಿಗೆ ಮಾತ್ರ ಬಳಸಿ ಎಂದಿದ್ದಾರೆ.
ಸಂಭವನೀಯ ಬರ ಪರಿಸ್ಥಿತಿ ಗಮನದಲ್ಲಿ ಇಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ನೀರಿನ ಸಂರಕ್ಷಣೆಗೆ ಸಂಬಂಧಿಸಿದಂತೆ ಜಿಲ್ಲಾವಾರು ಕಾರ್ಯ ಯೋಜನೆ ಸಿದ್ಧಪಡಿಸಿ ಎಂದು ಸೂಚಿಸಿದ್ದಾರೆ.
ಕಾಲಾನುಕಾಲಕ್ಕೆ ಜಿಲ್ಲಾಧಿಕಾರಿ ಮತ್ತು ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಿ, ಜನರು ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳಿ.
ನೀರಿನ ಬಳಕೆ ಮೇಲ್ವಿಚಾರಣೆ
ಜಲಾಶಯಗಳ ನೀರಿನ ಮಟ್ಟ, ಅಂತರ್ಜಲ ಪರಿಸ್ಥಿತಿ ಹಾಗೂ ನೀರಿನ ಬಳಕೆಯ ಮೇಲ್ವಿಚಾರಣೆ ನಿರಂತರವಾಗಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಆದೇಶಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.
ಯಾವುದೇ ರೀತಿಯ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ಎದುರಾದರೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಂಬಂಧಿತ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ತ್ವರಿತ ಕ್ರಮ ಕೈಗೊಳ್ಳಬೇಕು.
ಕುಡಿಯುವ ನೀರಿಗಾಗಿ ಕೊಳೆವ ಬಾವಿ ಕೊರೆಸಲು ಅನುಮತಿಯನ್ನು ತ್ವರಿತಗತಿಯಲ್ಲಿ ನೀಡಬೇಕು, ಇದರಲ್ಲಿ ಯಾವುದೇ ವಿಳಂಬ ಮಾಡಬೇಡಿ.
ಇಲಾಖೆಗಳ ಜೊತೆ ಸಮನ್ವಯತೆ
ಕುಡಿಯುವ ನೀರು ಮತ್ತು ಮೇವಿನ ವಿಷಯದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜೊತೆ ಸಮನ್ವಯತೆ ಅತ್ಯಗತ್ಯವಾಗಿದೆ.
ಜಿಲ್ಲಾಡಳಿತ ಉಳಿದ ವಿಚಾರಗಳನ್ನು ಬದಿಗಿರಿಸಿ, ಬರ ಪರಿಸ್ಥಿತಿ ನಿಭಾಯಿಸಲು ಸನ್ನದ್ಧರಾಗಿ, ಕಾಮಗಾರಿಗಳಿಗೆ ಹಣದ ಕೊರತೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತನ್ನಿ ಎಂದಿದ್ದಾರೆ.
122 ತಾಲ್ಲೂಕುಗಳಲ್ಲಿ ಸಮಸ್ಯೆ
ಸದ್ಯಕ್ಕೆ 122 ತಾಲ್ಲೂಕುಗಳಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ, 139 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ, 789 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, 669 ಹಳ್ಳಿಗಳಿಗೆ ಇದರಿಂದ ಪೂರೈಕೆ ಮಾಡಲಾಗುತ್ತಿದೆ.
ಮುಂದಿನ ದಿನಗಳಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಿ ಎಂದಿದ್ದಾರೆ.


