ಬೆಂಗಳೂರು:ಡಬಲ್ ಬಿಲ್, ನಕಲಿ ಬಿಲ್ ಮಾಡುವ ಅಧಿಕಾರಿಗಳನ್ನು ಬಡಿದುಹಾಕುವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಎಚ್ಚರಿಸಿದ್ದಾರೆ.
ಭಷ್ಟಾಚಾರ ವಿಷಯದಲ್ಲಿ ರಾಜೀ ಇಲ್ಲ, ಅಧಿಕಾರಿಗಳ ಪ್ರತಿ ಹೆಜ್ಜೆ ಪರಿಶೀಲಿಸುತ್ತೇನೆ, ನೀವು ಪ್ರತೀ ಫಲಾನುಭವಿಯ ಮಾಹಿತಿ ಇಟ್ಟುಕೊಳ್ಳಬೇಕು, ಅವರು ಅದನ್ನು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ನೋಡಿಕೊಳ್ಳಬೇಕು.
ನಕಲಿ ಬಿಲ್ಗಳಿಗೆ ಅವಕಾಶ ಇಲ್ಲ
ನಮ್ಮಲ್ಲಿ ಡಬಲ್ ಬಿಲ್ ಮಾಡುವ ಕೆಲಸ ಮಾಡುತ್ತಿದ್ದಾರೆ, ಅಂತಹವರನ್ನು ಬಡಿದುಹಾಕುತ್ತೇನೆ, ನಕಲಿ ಬಿಲ್ಗಳಿಗೆ ಅವಕಾಶ ಇಲ್ಲ.
ದಾಖಲೆ ತಿದ್ದುವುದಕ್ಕೆ ಬ್ರೇಕ್ ಹಾಕಲು ಆಸ್ತಿ ದಾಖಲೆ ಡಿಜಿಟಲೀಕರಣ ಮಾಡಲಾಗುತ್ತಿದೆ ಎಂದರು.
ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ನಡೆದ ಸರ್ಕಾರಿ ನೌಕರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಸರ್ಕಾರಿ ನೌಕರರನ್ನು ಉದ್ದೇಶಿಸಿ ಮಾತನಾಡಿದ ಪರಿ ಇದಾಗಿದೆ.
ದಿನದ ಕಾರ್ಯಕ್ರಮ ವಿವರ ನೀಡಬೇಕು
ಪ್ರತಿ ತಾಲ್ಲೂಕು ಅಧಿಕಾರಿಗಳು ತಮ್ಮ ದಿನದ ಕಾರ್ಯಕ್ರಮದ ವಿವರ ಹಿರಿಯ ಅಧಿಕಾರಿಗಳಿಗೆ ನೀಡಬೇಕು.
ಸಹಕಾರ, ಕಂದಾಯ ಅಧಿಕಾರಿಗಳಿಗೆ ನ್ಯಾಯ ನೀಡುವ ಅಧಿಕಾರ ಇರುತ್ತದೆ, ನ್ಯಾಯಪೀಠದಿಂದ ಅನ್ಯಾಯ ಆಗಬಾರದು, ಯಾರ ಒತ್ತಡಕ್ಕೂ ಮಣಿಯದೆ ಕೆಲಸ ಮಾಡಿ.
ವಿಧಾನಮಂಡಲದ ಅಧಿವೇಶನ ಮುಗಿಯುತ್ತಿದ್ದಂತೆ, ಪ್ರತೀ ತಾಲ್ಲೂಕಿಗೂ ತೆರಳಿ, ಕೆಳಮಟ್ಟದ ಕಚೇರಿಯಿಂದ ಶಾಲೆ, ಆಸ್ಪತ್ರೆಗಳಿಗೂ ಭೇಟಿ ನೀಡಿ ನಿಮ್ಮ ಕಾರ್ಯವೈಖರಿಯನ್ನು ಖುದ್ದಾಗಿ ತಿಳಿಯುತ್ತೇನೆ ಎಂದರು.
ನೌಕರರಿಂದ ಮಾಹಿತಿ ಸಂಗ್ರಹ
ಬ್ಯಾಂಕ್ವೆಟ್ಹಾಲ್ನಲ್ಲಿ ಇಲಾಖಾ ಕಾರ್ಯದರ್ಶಿಗಳೂ, ಪ್ರಧಾನ ಕಾರ್ಯದರ್ಶಿಗಳೂ ಅಲ್ಲದೆ, ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೌಕರರನ್ನು ಉದ್ದೇಶಿಸಿ ಮಾತನಾಡಿ, ಅವರಿಂದ ಕೆಲವು ಮಾಹಿತಿಗಳನ್ನು ಪಡೆದರು.
ಮುಂದುವರೆದು ಮಾತನಾಡಿದ ಅವರು, ನಾನೂ ಸೇರಿದಂತೆ ನನ್ನ ಮಂತ್ರಿಮಂಡಲ, ಅಧಿಕಾರಿಗಳು, ಎಲ್ಲರೂ ಸರ್ಕಾರಿ ನೌಕರರು, ನಮ್ಮದು ಟೀಮ್ ಕರ್ನಾಟಕ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಕಲ್ಯಾಣ ಮಾಡುವುದೇ ನಮ್ಮ ಗುರಿ ಎಂದರು.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಕಾಲದಿಂದ ಇಲ್ಲಿಯವರೆಗೆ ಎಲ್ಲ ಮುಖ್ಯಮಂತ್ರಿಗಳು ತಮ್ಮದೇ ರೀತಿಯಲ್ಲಿ, ತಮ್ಮದೇ ಅನುಭವ ಸಿದ್ಧಾಂತದ ಮೇಲೆ ಆಡಳಿತ ಮಾಡಿದ್ದಾರೆ.
ಇತಿಹಾಸ ಸೃಷ್ಟಿಸ ಬಯಸುತ್ತೇನೆ
ನಮ್ಮ, ನಿಮ್ಮ ಮೇಲೆ ಜನರ ಬದುಕಿನಲ್ಲಿ, ಬದಲಾವಣೆ ತರುವ ಜವಾಬ್ದಾರಿ ಇದೆ, ನಾನು ಇತಿಹಾಸ ಓದಲು ಬರೆಯಲು ಇಚ್ಚಿಸುವುದಿಲ್ಲ, ಇತಿಹಾಸ ಸೃಷ್ಟಿಸಲು ಬಯಸುತ್ತೇನೆ, ಸರ್ಕಾರಿ ನೌಕರರ ಸೇವೆಯಿಂದಲೇ ನಮ್ಮ ರಾಜ್ಯ ಈ ಹಂತಕ್ಕೆ ಬೆಳೆದಿದೆ ಎಂದರು.
ನಮ್ಮಲ್ಲಿರುವ ಶಿಕ್ಷಣ, ಆರೋಗ್ಯ ಸೌಲಭ್ಯ ಬೇರೆ ಎಲ್ಲೂ ಇಲ್ಲ, ನಾನು ನನ್ನ ಮೇಲೇ ಕಣ್ಣು ಇಟ್ಟುಕೊಂಡಿದ್ದೇನೆ, ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಶಾಸಕರು ಯಾವ ರೀತಿ ಕೆಲಸ ಮಾಡುವ ಕುರಿತು ಪರಿಶೀಲನೆ ಮಾಡುತ್ತೇವೆ, ನಾವು ಕೆಲಸ ಮಾಡುವುದೇ ಜನರಿಗಾಗಿ, ಬೇರೆಯವರಿಗೆ ಒಪ್ಪಿಸದಿದ್ದರೂ ನಿಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಕೆಲಸ ಮಾಡಿ ಎಂದರು.
ಅಧಿಕಾರ ಜವಾಬ್ದಾರಿಯ ಸಂಕೇತ, ಇದು ಸಿಂಹಾಸನ ಅಲ್ಲ, ಅವಕಾಶ, ಮೂರ್ತಿಗೆ ಬೆಲೆ ಕಟ್ಟಿದರೂ ಭಗವಂತನಿಗೆ ಬೆಲೆ ಕಟ್ಟಲು ಆಗಲ್ಲ, ಜನರಲ್ಲೇ ದೇವರನ್ನು ಕಾಣಬಹುದು, ಗ್ಯಾರಂಟಿ ಬಗ್ಗೆ ಶಾಸಕರು, ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ, ಪ್ರಧಾನಮಂತ್ರಿಗಳು ಟೀಕಿಸಿದರೂ ನಂತರ ಅವರೇ ಪಾಲಿಸುವಂತಾಗಿದೆ, ನಮ್ಮ ಮಾದರಿ ದೇಶಕ್ಕೆ ಮಾದರಿಯಾಗಿದೆ ಎಂದರು.
ಶಾಸಕರು ಪ್ರಜಾಸೇವೆ ಮಾಡಬೇಕು
ಪ್ರಜಾಸೇವೆ ಇಲಾಖೆ ಮೂಲಕ ಜಿಲ್ಲಾ ಮಂತ್ರಿ, ಶಾಸಕರು 2 ವಾರಕ್ಕೊಮ್ಮೆ ತಾಲ್ಲೂಕಿಗೆ ಹೋಗಿ ಪ್ರಜಾಸೇವೆ ಕೆಲಸ ಮಾಡಬೇಕು, ತಿಂಗಳ ಮೊದಲ ಹಾಗೂ ಮೂರನೇ ಶನಿವಾರ, ನಂತರ ಪಂಚಾಯತ್ ಮಟ್ಟದಲ್ಲಿ ಮಾಡಬೇಕು, ಶಾಸಕರು ಹೋಬಳಿ ಮಟ್ಟದಲ್ಲಿ ಮಾಡಬೇಕು, ಜನರ ಸಂಕಷ್ಟಕ್ಕೆ ಕಾನೂನು ಚೌಕಟ್ಟಿನಲ್ಲಿ ಸಹಾಯ ಮಾಡಿ.
ಬಡವರಿಗೆ ಸೂರಿನ ಆಧಾರ ನೀಡುತ್ತಿದ್ದೇವೆ, ಅವರು ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗೆ ಭದ್ರತೆ ನೀಡುತ್ತಿದ್ದೇವೆ, ಜನಸೇವೆ ನಮ್ಮ ನಿಮ್ಮ ಮೂಲ ಉದ್ದೇಶವಾಗಿರಬೇಕು ಎಂದರು.


