ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ
ಬೆಂಗಳೂರು:ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಮಂಡಲದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ಮುಂಗಾರು ಅಧಿವೇಶನ ಆರಂಭ ದಿನದಿಂದ ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ನಡೆಸುತ್ತಿರುವ ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ತೀವ್ರಗೊಳಿಸಲು ಅಹೋರಾತ್ರಿ ಧರಣಿ ನಡೆಸುತ್ತಿವೆ.
ಸರ್ಕಾರದಿಂದ ಭ್ರಷ್ಟಾಚಾರಕ್ಕೆ ಕುಮ್ಮಕ್ಕು
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ರೂ. ಅಕ್ರಮದ ಆರೋಪಿ ನಾಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ.
ನಾಗೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ಮೊಕದ್ದಮೆಗಳನ್ನು ಹೂಡಿ ಆರೋಪಿ ಸ್ಥಾನದಲ್ಲಿ ಇದ್ದಾರೆ ಎಂಬುದನ್ನು ಸಾಬೀತು ಮಾಡಿದ್ದರೂ ಬ್ಲ್ಯಾಕ್ಮೇಲ್ಗೆ ಮಣಿದು ಮಂತ್ರಿ ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇರ ಆರೋಪ ಮಾಡಿದ್ದಾರೆ.
ನಾಗೇಂದ್ರ ರಾಜೀನಾಮೆ ಪಡೆಯದೆ ಸದನ ನಡೆಯಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಬಿಜೆಪಿ-ಜೆಡಿಎಸ್ ಸದಸ್ಯರು ಇಂದೂ ಸಹಾ ವಿಧಾನಸಭೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಧರಣಿ ನಡೆಸಿದರು.

ವಿಧಾನಸೌಧ ಮುತ್ತಿಗೆ ಯತ್ನ
ಸದನ ಆರಂಭಕ್ಕೂ ಮುನ್ನ ಉಭಯ ಶಾಸಕರು ಮತ್ತು ಕಾರ್ಯಕರ್ತರು ವಿಧಾನಸೌಧ ಮುತ್ತಿಗೆಗೆ ಪ್ರಯತ್ನಿಸಿದರು.
ಈ ಸಂದರ್ಭದಲ್ಲಿ ಪೋಲಿಸರು, ಪ್ರತಿಭಟನಾಕಾರರನ್ನು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದರು.
ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದು ರಾಜ್ಯಪಾಲರಿಗೆ ಮನವಿಪತ್ರ ಕೊಟ್ಟಿದ್ದಲ್ಲದೆ, ಶಾಸಕರ ಭವನದ ಮುಂದಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಯಾವುದಕ್ಕೂ ಜಗ್ಗದ ಸರ್ಕಾರ
ಸರ್ಕಾರ ಇದಾವುದಕ್ಕೂ ಜಗ್ಗದ ಹಿನ್ನೆಲೆಯಲ್ಲಿ ಅಧಿವೇಶನದ 6ನೇ ದಿನವಾದ ಇಂದೂ ವಿಧಾನಮಂಡಲದಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ, ಅಹೋರಾತ್ರಿ ಧರಣಿ ಆರಂಭಿಸಿದರು.
ಸದನ ಅನಿರ್ದಿಷ್ಟಾವಧಿಗೆ ಮೂಂದೂಡಿದರೂ ಸಚಿವ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಪಕ್ಷಗಳ ನಾಯಕರು ತಿಳಿಸಿದ್ದಾರೆ.


