ಬರಪರಿಸ್ಥಿತಿ-ಕಸ್ತೂರಿ ರಂಗನ್ ಸಮಿತಿ ಶಿಫಾರಸು ಸಾಧಕ-ಬಾಧಕಗಳ ಚರ್ಚೆ
ಬೆಂಗಳೂರು:ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಎದುರಾಗಿರುವ ಬರಪರಿಸ್ಥಿತಿ ಮತ್ತು ಪಶ್ಚಿಮಘಟ್ಟ ಪರಿಸರ ಸಂರಕ್ಷಣೆಗೆ ಕಸ್ತೂರಿ ರಂಗನ್ ಸಮಿತಿ ನೀಡಿರುವ ಶಿಫಾರಸುಗಳ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ಇಂದಿಲ್ಲಿ ತೀರ್ಮಾನಿಸಿದೆ.
ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿನ ಶಿಫಾರಸುಗಳ ಬಗ್ಗೆ ಪೂರ್ಣ ಪರಾಮರ್ಶೆ ನಡೆಸಿ ಸದನದ ನಿರ್ಣಯವನ್ನು ಕೇಂದ್ರಕ್ಕೆ ಕಳುಹಿಸಲು ಸಭೆ ನಿರ್ಧರಿಸಿತು.
ಬೆಳೆಗಳಿಗೆ ಹಾನಿ
ರಾಜ್ಯದ 100 ತಾಲ್ಲೂಕುಗಳಿಗಿಂತ ಹೆಚ್ಚು ಪ್ರದೇಶ ಬರಪೀಡಿತವಾಗಿದ್ದು, ಬೆಳೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿದೆ.
ಅಲ್ಲದೆ, ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆ ಎದುರಾಗಿದೆ, ಜೊತೆಗೆ ಕೃಷಿ ಕಾರ್ಮಿಕರು ಗುಳೇ ಹೋಗುತ್ತಿದ್ದಾರೆ.
ಬರ ಸಂಕಷ್ಟ ನಿಭಾಯಿಸಲು ರಾಜ್ಯ ಸರ್ಕಾರ ಎಲ್ಲ ಕ್ರಮ ಕೈಗೊಂಡಿದ್ದು, ಈ ದಿಸೆಯಲ್ಲಿ ಕೇಂದ್ರದ ನೆರವು ಪಡೆಯುವಲ್ಲಿ ಒಕ್ಕೊರಲಿನ ನಿರ್ಣಯ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
ಕೇಂದ್ರಕ್ಕೆ ಮನವಿ
ಈ ಹಿಂದೆ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ನ್ಯಾಯಾಲಯದ ಮೊರೆ ಹೋಗಬೇಕಾಯಿತು.
ಇದೀಗ ಸದನ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಕಳುಹಿಸಿ ಪರಿಹಾರ ಕೋರಲು ಸರ್ಕಾರ ತೀಮಾನಿಸಿದ್ದು, ಇದಕ್ಕಾಗಿ ವಿಶೇಷ ಅಧಿವೇಶನ ಕರೆಯಲಾಗುತ್ತಿದೆ.
ರೈತರಿಗೆ ಕೃಷಿ ಸಾಲ ವಿತರಿಸಲು ನಬಾರ್ಡ್ನಿಂದ 2,000 ಕೋಟಿ ರೂ. ಪುನರ್ಧನ ಪಡೆಯಲು ರಾಜ್ಯ ಸಚಿವ ಸಂಪುಟ ಇಂದಿಲ್ಲಿ ಅನುಮೋದನೆ ನೀಡಿದೆ.
ಸರ್ಕಾರದ ಖಾತ್ರಿ
ನಬಾರ್ಡ್ನಿಂದ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು ಸಾಲ ಪಡೆಯಲು ಸರ್ಕಾರ ಖಾತ್ರಿ ನೀಡಿದೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಮತ್ತು ತಾರಕ ಜಲಾಶಯ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪಂಗಡ ಕಾಲೋನಿ ಮತ್ತು ಇತರೆ ಪುನರ್ ವಸತಿ ಗ್ರಾಮಗಳಲ್ಲಿ ಮೂಲಸೌಕರ್ಯ ಕಲ್ಪಿಸಲು 61 ಕೋಟಿ ರೂ. ಬಿಡುಗಡೆಗೆ ಸಂಪುಟ ಸಮ್ಮತಿಸಿದೆ.
ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯ ಜಾರಿಗೊಳಿಸಿರುವ ಪರಿಷ್ಕೃತ ಪ್ರಾದೇಶಿಕ ಸಂಪರ್ಕ ಯೋಜನೆ ಆರ್ಸಿಎಸ್-ಉಡಾನ್ 6.0ರಲ್ಲಿ ಭಾಗವಹಿಸಲು ತಾತ್ವಿಕ ಅನುಮೋದನೆ ನೀಡಿತು.
4,500 ಎಲೆಕ್ಟ್ರಿಕ್ ಬಸ್
ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕಾ ಸಚಿವಾಲಯ ಪ್ರಧಾನಿ ಇ-ಡ್ರೈವ್ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಹಂಚಿಕೆ ಮಾಡಿರುವ 4,500 ಎಲೆಕ್ಟ್ರಿಕ್ ಬಸ್ಗಳ ಜಿಸಿಸಿ ಮಾದರಿ ಕಾರ್ಯಾಚರಣೆಗೆ ಸಮ್ಮತಿಸಿದೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಟಿಬಿ ವೃತ್ತದಿಂದ ಕೊಲ್ಲಿ ಸರ್ಕಲ್ವರೆಗಿನ ರಸ್ತೆ ಅಗಲೀಕರಣ ಕಾಮಗಾರಿಯನ್ನು 137.92 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.


