ಬೆಂಗಳೂರು:ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಬ್ಬ ಒಕ್ಕಲಿಗನನ್ನೂ ಬೆಳೆಯಲು ಬಿಟ್ಟಿಲ್ಲ, ನಾನು ಹಿಂದುಳಿದವನು ಅಂತ ನನ್ನನ್ನು ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ವೈ.ಕೆ.ರಾಮಯ್ಯ, ನಾಗೇಗೌಡ, ಬಚ್ಚೇಗೌಡ, ವರದೇಗೌಡ, ಭೈರೇಗೌಡ ಸೇರಿ ಸಾಲು-ಸಾಲು ಒಕ್ಕಲಿಗರ ರಾಜಕೀಯ ಬದುಕನ್ನು ಮುಗಿಸಿದರು, ಅಷ್ಟೇ ಅಲ್ಲ, ಬೆರೆಯವರು ಒಕ್ಕಲಿಗ ನಾಯಕರಾಗಿ ಬೆಳೆಯದಂತೆ ಮಾಡುತ್ತಿದ್ದಾರೆ ಎಂದರು.
ಆದರೆ ಇದು ನಡೆಯಲ್ಲ
ಬುದ್ಧಿವಂತ, ರಾಜಕೀಯ ಪ್ರಜ್ಞೆ ಇರುವ ಒಕ್ಕಲಿಗರನ್ನು ದೇವೇಗೌಡರು ಬೆಳೆಯಲು ಬಿಡದೆ ಮುಗಿಸುತ್ತಾರೆ, ಈಗ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರನ್ನೂ ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ಇದು ನಡೆಯಲ್ಲ.
ಜಿ.ಟಿ.ದೇವೇಗೌಡರಿಗೂ ಎಚ್ಚರಿಸಿದ್ದೀನಿ, ಆ ಪಕ್ಷದಲ್ಲಿದ್ದರೆ ಮುಗಿಸುತ್ತಾರೆ, ಬೇಗ ಹೊರಗೆ ಬಂದ್ರೆ ನಿಮಗೆ ಒಳ್ಳೆಯದು, ಮನೆ ಮಗ ಅಂತಿದ್ದ ಬಿ.ಎಲ್.ಶಂಕರ್, ವೈ.ಕೆ.ರಾಮಯ್ಯ ಅವರನ್ನೇ ಮುಗಿಸಿದವರು ಇನ್ನು ಯೋಗೇಶ್ವರ್ ಅವರನ್ನು ಸಹಿಸುತ್ತಾರಾ ಎಂದರು.
ನರೇಂದ್ರ ಮೋದಿ ಅವರಂತಹ ಸುಳ್ಳು ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ, ಮೋದಿ ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು, ಈಗ ಮೋದಿ ಅವರನ್ನೇ ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಛೇಡಿಸಿದರು.
ಸಿದ್ದರಾಮಯ್ಯಗೆ ಅಹಂ ಎನ್ನುತ್ತಾರೆ
ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ ೧೯೯೪ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ, ದೇವೇಗೌಡರನ್ನು ಜನತಾ ದಳದ ಅಧ್ಯಕ್ಷರನ್ನಾಗಿ ಮಾಡಲು ಅಂದಿನ ರಾಷ್ಟ್ರೀಯ ಅಧ್ಯಕ್ಷ ಎಸ್.ಆರ್.ಬೊಮ್ಮಾಯಿ ಸಿದ್ಧರಿರಲಿಲ್ಲ, ಏಕೆಂದರೆ ಇವರು ಬೊಮ್ಮಾಯಿ ಸರ್ಕಾರ ಬೀಳುವಂತೆ ಮಾಡಿದ್ದರು, ಆದರೂ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರ ನಿಂತೆವು, ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ, ಇದು ಪಾಳೇಗಾರಿಕೆ ಅಲ್ಲವೇ ದೇವೇಗೌಡರೇ ಎಂದು ಪ್ರಶ್ನಿಸಿದರು.
ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ, ದಲಿತರು, ಹಿಂದುಳಿದವರನ್ನು ಅವರಿಗೆ ಕಂಡರೆ ಆಗಲ್ಲ, ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ, ಇದೆಲ್ಲಾ ಪಾಳೇಗಾರಿಕೆ ಅಲ್ಲವೇ.
ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಬಿಡಾರ ಹೂಡಿದ್ದಾರೆ, ಜೆಡಿಎಸ್ ಅಥವಾ ಬಿಜೆಪಿಯಿಂದ ಬೇರೆ ಯಾರಾದರೂ ಸ್ಪರ್ಧಿಸಿದ್ದರೆ, ಎನ್ಡಿಎ ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ವಾರಗಟ್ಟಲೆ ಚನ್ನಪಟ್ಟಣದಲ್ಲಿ ಬೀಡುಬಿಟ್ಟು ಮತ ಕೇಳುತ್ತಿದ್ದರೆ ಎಂದು ಪ್ರಶ್ನಿಸಿದರು.
ದೇವೇಗೌಡರಿಗೆ ಹೊಟ್ಟೆಯುರಿ
ನಾನು ಎರಡನೇ ಬಾರಿಗೆ ಮುಖ್ಯಮಂತ್ರಿಯಾದೆ ಎಂದು ದೇವೇಗೌಡರಿಗೆ ಹೊಟ್ಟೆಯುರಿ, ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ.
ರಾಜ್ಯದ ಜನತೆ ಆರಿಸಿರುವ ನಮ್ಮ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ, ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡುತ್ತದೆಯೇ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ.
ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ನೀಡಿದೆ, ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿಯಾಗಿ ರಾಜ್ಯದ ಜನತೆಯ ಮುಂದೆ ಇಟ್ಟಿದ್ದೇವೆ.
ನೀವು ಏನು ಸಾಧನೆ ಮಾಡಿದ್ದೀರಿ
ನೀವು ಏನು ಸಾಧನೆ ಮಾಡಿದ್ದೀರಿ ಅಂತ ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ ಎಂದರು.
ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ, ಆದರೆ, ಒಂದು ಮಾತು ಹೇಳುವೆ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ತಪ್ಪಲ್ಲ, ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.
ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ, ಯಾವುದೇ ಕಾರಣಕ್ಕೂ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂಬುದಾಗಿ ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.


