ಯೋಜನೆಗಳ ಪರಿಷ್ಕರಣೆ ನಿರ್ಧಾರ ಕೈಗೊಂಡಿಲ್ಲ: ಸಿದ್ದರಾಮಯ್ಯ
ಬೆಳಗಾವಿ:ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಹಣದ ಕೊರತೆಯಾಗಿಲ್ಲ, ಯೋಜನೆಗಳ ಪರಿಷ್ಕರಣೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ನಲ್ಲಿಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿ ಸೂಕ್ತ ಅನುದಾನ ಕಲ್ಪಿಸಲಾಗಿದೆ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಜೆಟ್ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಅಗತ್ಯ ಅನುದಾನ ಒದಗಿಸಲಾಗಿದೆ ಎಂದರು.
ಬಜೆಟ್ನಲ್ಲಿ ಹಣ ಮೀಸಲು
ಸಿ.ಟಿ.ರವಿ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಗ್ಯಾರಂಟಿ ಯೋಜನೆಗಳು ಅಸ್ತಿತ್ವಕ್ಕೆ ಬಂದಾಗಿನಿಂದ 2024ರ ನವೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆಗೆ 32,187 ಕೋಟಿ ರೂ., ಅನ್ನಭಾಗ್ಯ ಯೋಜನೆಗೆ 8,931 ಕೋಟಿ ರೂ., ಗೃಹಜ್ಯೋತಿಗೆ 14,869 ಕೋಟಿ ರೂ., ಶಕ್ತಿ ಯೋಜನೆಗೆ 6,543 ಕೋಟಿ ರೂ., ಯುವನಿಧಿ ಯೋಜನೆಗೆ 221.3 ಕೋಟಿ ರೂ. ವೆಚ್ಚವಾಗಿದೆ.
30 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಲಾಗಿದೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಅವರ ಆಪ್ತ ಸಿಬ್ಬಂದಿ ಮತ್ತು ಪ್ರಾಧಿಕಾರದ ಸದಸ್ಯರುಗಳ ವೇತನ ಹಾಗೂ ಇತರೆ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಗೌರವಧನ, ಸಭಾ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದರು.