ನನ್ನ ಪರವಾಗಿ ಕಾರ್ಯಕರ್ತರು ಕೂಗುವುದು ಬೇಡ
ಶೃಂಗೇರಿ:ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ, ನನಗೆ ಯಾರ ಬೆಂಬಲವೂ ಬೇಡ, ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ಕಾಗಿ ಹೇಳಿದ್ದಾರೆ.
ನಾನುಂಟು ಕಾಂಗ್ರೆಸ್ ಪಕ್ಷವುಂಟು, ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ, ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ, ನಾನು ನನ್ನ ಕರ್ತವ್ಯ ಮಾಡುತ್ತೇನೆ.
ಜನ ಆಶೀರ್ವಾದ ಮಾಡಿದ್ದಾರೆ
ನನ್ನ ರಾಜಕೀಯ ಜೀವನದ ತಿರುವುಗಳ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದು ಬೇಡ, ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ, ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ, ಐದು ವರ್ಷ ಸರ್ಕಾರ ಮಾಡುತ್ತೇವೆ, ಪಕ್ಷ ಹೇಳಿದಂತೆ ನಾನು ಹಾಗೂ ಮುಖ್ಯಮಂತ್ರಿ ಕೆಲಸ ಮಾಡುತ್ತೇವೆ, ಬೇರೆಯವರ ಮಾತುಗಳು ಗೌಣ ಎಂದರು.
ಹೆಲಿಪ್ಯಾಡ್ನಲ್ಲಿ ಮಾಧ್ಯಮಗರೊಂದಿಗೆ ಮಾತನಾಡಿದ ಅವರು, “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ, ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ ಎಂದರು.
ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು, ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ, ಟೆಂಪಲ್ ರನ್ ಎಂಬುದಾಗಿ ವ್ಯಾಖ್ಯಾನ ಮಾಡುವುದಾದರೆ, ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ.
ಕರ್ಮ ಹಲವು ನಿಷ್ಠೆ ಒಂದೇ
ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ, ಅವರವರ ವಿಚಾರ ಅವರವರ ನಂಬಿಕೆ, ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ, ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ.
ಇಂದು ಬಹಳ ಪವಿತ್ರವಾದ ದಿನ, ಭಾರತಿ ತೀರ್ಥ ಮಹಾಸ್ವಾಮಿಗಳು ಮಠದ ಜವಾಬ್ದಾರಿ ಸ್ವೀಕರಿಸಿ 50 ವರ್ಷಗಳು ಪೂರ್ಣಗೊಂಡಿವೆ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಶ್ಲೋಕ, ಧರ್ಮವನ್ನು ಯಾರು ಕಾಪಾಡುತ್ತಾರೋ ಧರ್ಮ ಅವರನ್ನು ಕಾಪಾಡುತ್ತದೆ ಎಂಬ ಸಂದೇಶ ಸಾರುತ್ತದೆ, ಅದರಂತೆ ಮಹಾಸ್ವಾಮಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡದೆ ಕೇವಲ ಧರ್ಮ, ಸಂಸ್ಕೃತಿ, ಸಂಸ್ಕಾರ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ, ತಮ್ಮ ಕರ್ತವ್ಯ ನಿಭಾಯಿಸಿಕೊಂಡು ನಮಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ.
ನನಗೆ ಮಹಾಸ್ವಾಮಿಗಳ ಮೇಲೆ ವಿಶೇಷವಾದ ನಂಬಿಕೆ, ಭಕ್ತಿ ಇದೆ, ತಾಯಿ ಸರಸ್ವತಿ ಅವರಿಗೆ ಆಶೀರ್ವಾದ ಮಾಡಿದ್ದಾಳೆ, ಇಲ್ಲಿ ಸಂಸ್ಕೃತ ವಿದ್ಯಾಪೀಠ ಮಾಡಲು ರಾಜೀವ್ ಗಾಂಧಿ ತೀರ್ಮಾನಿಸಿದರು, ಮಠವು ಬೆಂಗಳೂರಿನಲ್ಲಿ ಮಕ್ಕಳಿಗೆ ಜ್ಞಾನದ ದೀಪ ಬೆಳಗುವ ಪ್ರಯತ್ನ ಮಾಡುತ್ತಿದೆ, ಇವರ ಶುಭ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ, ಸರ್ಕಾರ ಪರ ಹಾಗೂ ವೈಯಕ್ತಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.
’ನಮ್ಮ ತೆರಿಗೆ ನಮ್ಮ ಹಕ್ಕು’
ಪ್ರವಾಸಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಿತ ಕಾಪಾಡಲು ಕೇಂದ್ರ ಸರ್ಕಾರದ ವಿರುದ್ಧ ’ನಮ್ಮ ತೆರಿಗೆ ನಮ್ಮ ಹಕ್ಕು’ ಹೋರಾಟ ಮಾಡಲೇಬೇಕಿದೆ ಎಂದರು.
ರಾಜ್ಯದ ತೆರಿಗೆ ಪಾಲಿನ ಅನ್ಯಾಯದ ವಿರುದ್ಧ ಕಾನೂನಾತ್ಮಕವಾಗಿ ಹೇಗೆ ಹೋರಾಟ ನಡೆಸಬೇಕೆಂಬ ಬಗ್ಗೆ ಮುಖ್ಯಮಂತ್ರಿಗಳು ಅಧ್ಯಯನ ಮಾಡುತ್ತಿದ್ದು, ರಾಜ್ಯ ಬಜೆಟ್ ಮಂಡನೆ ವೇಳೆ ಅಸಮಾನ ಹಂಚಿಕೆಗೆ ಉತ್ತರ ಕೊಡುತ್ತೇವೆ.
ನೀರಾವರಿ ಮತ್ತು ನಗರಾಭಿವೃದ್ಧಿಗೆ ನೀಡುವ ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ.
ಕರ್ನಾಟಕಕ್ಕೆ ಬರಬೇಕಿರುವ ತೆರಿಗೆ ಪಾಲು ಮತ್ತು ಅಭಿವೃದ್ಧಿ ಅನುದಾನ ಕೊಡಿಸುವಲ್ಲಿ ರಾಜ್ಯ ಬಿಜೆಪಿ ಸಂಸದರು ಏಕೆ ಮೌನವಾಗಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದರು.