ಬೆಂಗಳೂರು:ಮುಡಾ ಪ್ರಕರಣದ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್ಚಿಟ್ ನೀಡಿರುವ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಕ್ರಿಯಿಸಿದ್ದಾರೆ.
ಮುಡಾದಿಂದ ಬಿಡಿ ನಿವೇಶನಗಳನ್ನು ಪಡೆದುಕೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಪ್ರಭಾವ ಬೀರಿದೆ ಎಂಬ ಆರೋಪ ಕುರಿತು ಲೋಕಾಯುಕ್ತ ಪೋಲಿಸರು ತನಿಖೆ ನಡೆಸಿದ್ದರು.
ವರಿಷ್ಠರ ತೀರ್ಮಾನವೇ ಅಂತಿಮ
ಮುಖ್ಯಮಂತ್ರಿ ಯಾರಾಗಬೇಕೆಂಬ ಕುರಿತು ಕಾಂಗ್ರೆಸ್ ವರಿಷ್ಠರ ತೀರ್ಮಾನವೇ ಅಂತಿಮ ಎಂದರು.
ಮುಖ್ಯಮಂತ್ರಿ ಹುದ್ದೆ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಬಣಗಳು ವ್ಯಕ್ತಪಡಿಸುತ್ತಿರುವ ಅಭಿಪ್ರಾಯಗಳು ಏನೇ ಇರಲಿ, ವರಿಷ್ಠರ ತೀರ್ಮಾನವೇ ಅಂತಿಮ ಎಂದರು.
ಬಜೆಟ್ ಸಿದ್ಧತೆ ನಡೆಸಬೇಕಿರುವುದರಿಂದ ೨೦೨೫ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು.
ರಾಜಕೀಯ ಪ್ರೇರಿತ
ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿ ಆರೋಪಗಳು ರಾಜಕೀಯ ಪ್ರೇರಿತ.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟೀಷರ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಿ, ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ಚಂದ್ರ ಬೋಸ್ ಪ್ರಾಣ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದರು.
ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ, ಉಜ್ವಲ ಭವಿಷ್ಯ ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಬದುಕನ್ನು ಮೀಸಲಿಟ್ಟರು, ಎರಡು ಬಾರಿ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಇಂಡಿಯನ್ ನ್ಯಾಷನಲ್ ಆರ್ಮಿ
ಮಹಾತ್ಮಾ ಗಾಂಧಿ ಪ್ರತಿಪಾದಿಸುತ್ತಿದ್ದ ಸತ್ಯ, ಅಹಿಂಸೆ ಮಾರ್ಗದಲ್ಲಿ ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು, ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್ಎ) ಸ್ಥಾಪಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ ಎಂದರು.