ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲೇ ಸುಗ್ರೀವಾಜ್ಞೆ ತರಲಿದೆ
ಮೈಸೂರು: ಆರ್ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ, ಸಾಲ ಪಡೆದವರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಭಯ ನೀಡಿದ್ದಾರೆ.
ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಅಮಾನವೀಯ ರೀತಿ ವಸೂಲಾತಿ
ಲಭ್ಯವಾಗುವ ಕಡೆ ಜನರು ಸಾಲ ಪಡೆಯುತ್ತಾರೆ, ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ಸಾಲದ ಮೇಲೆ ಹೆಚ್ಚಿನ ಬಡ್ಡಿ ದರ ವಿಧಿಸುವುದಲ್ಲದೇ, ಗೂಂಡಾಗಳ ಮೂಲಕ ಸಾಲ ಪಡೆದವರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ವಸೂಲಾತಿಯಲ್ಲಿ ತೊಡಗಿದ್ದಾರೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕ ಶೇ.28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ, ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದು ಗಮನಿಸಲಾಗಿದೆ.
ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿನ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆ ತರಲಿದೆ.
ಕೇಂದ್ರ ಬಜೆಟ್ನಿಂದ ನಿರೀಕ್ಷೆ ಇಲ್ಲ
ಕೇಂದ್ರ ಸರ್ಕಾರದ ಬಜೆಟ್ನಿಂದ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ, ಕಳೆದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ ಮಾಡಿದ್ದರು, ಆದರೆ, ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ.
ನಬಾರ್ಡ್ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿ, ಈ ಹಿಂದೆ ನೀಡಲಾಗಿದ್ದ 5,800 ಕೋಟಿ ರೂ. ಮೊತ್ತವನ್ನು, 2,345 ಕೋಟಿ ರೂ.ಗೆ ಇಳಿಸಲಾಯಿತು, ಕರ್ನಾಟಕ ವಾರ್ಷಿಕ 4 ಲಕ್ಷ ಕೋಟಿ ರೂ.ನಷ್ಟು ತೆರಿಗೆಯನ್ನು ಕೇಂದ್ರಕ್ಕೆ ನೀಡಿದರೆ, ರಾಜ್ಯಕ್ಕೆ ಮರಳಿ ಬರುತ್ತಿರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ, ತೆರಿಗೆ ಹಂಚಿಕೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.
ಕುಂಭಮೇಳದ ಬಗ್ಗೆ ಟೀಕೆ ಮಾಡುವವರು ಅಯೋಗ್ಯರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ಬಾಲಿಶವಾಗಿದೆ, ತಪ್ಪು ನಡೆದಾಗ ಟೀಕೆ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇರುತ್ತದೆ.
ಇ.ಡಿ. ವರದಿ ರಾಜಕೀಯ ಪ್ರೇರಿತ
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ವರದಿ ರಾಜಕೀಯ ಪ್ರೇರಿತ, ಮನಿಲ್ಯಾಂಡ್ರಿಂಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ.
ಮುಡಾ ಮಾಜಿ ಆಯುಕ್ತ ನಟೇಶ್ ಮೇಲೆ ಇ.ಡಿ. ಕ್ರಮ ಕಾನೂನುಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಆಗಿಲ್ಲ ಎಂಬುದಾಗಿ ಹೈಕೋರ್ಟ್ ಹೇಳಿದೆ.
ಸಂಪೂರ್ಣ ವರದಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡುವ ಮೂಲಕ ಇ.ಡಿ., ಮುಡಾ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತಗೊಳಿಸಿದೆ, ಸರ್ಕಾರ ಹಾಗೂ ಮುಖ್ಯಮಂತ್ರಿ ವರ್ಚಸ್ಸಿಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ ಎಂದರು.
ನನ್ನ ತೇಜೋವಧೆ ಮಾಡಲಾಗುತ್ತಿದೆ
ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣ ನನ್ನ ತೇಜೋವಧೆ ಮಾಡಲಾಗುತ್ತಿದೆ, ನನ್ನ ಪತ್ನಿಗೆ ಇ.ಡಿ. ನೀಡಿದ ನೋಟೀಸ್ಗೆ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ, ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ, ಆದರೆ, ಅವರ ಪ್ರಯತ್ನಗಳು ಸಫಲವಾಗುವುದಿಲ್ಲ.
ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ಸಂಬಂಧ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ, ರಾಜ್ಯದ ನಾಯಕರು ಸಭೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ, ಸತ್ಯಕ್ಕೆ ವಿರುದ್ಧವಾದ ಊಹೆಗಳು ತಪ್ಪು ಎಂದರು.