ಬೆಂಗಳೂರು:ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.
ಫೆಬ್ರವರಿ 11ರಿಂದ 14 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಸಮಾವೇಶ ಮೂಲಕ 10 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆ ಬರುವುದು ಖಾತ್ರಿ ಎಂದರು.
ಹೊಸ ಕೈಗಾರಿಕಾ ನೀತಿ
ಉದ್ಘಾಟನೆ ದಿನದಂದು ಹೊಸ ಕೈಗಾರಿಕಾ ನೀತಿ ಹಾಗೂ ಏಕಗವಾಕ್ಷಿ ಪೋರ್ಟೆಲ್ ಅನಾವರಣ ಮಾಡುವ ಮೂಲಕ ಕೈಗಾರಿಕೋದ್ಯಮಿಗಳಿಗೆ ಇರುವ ತೊಡಕುಗಳನ್ನು ನಿವಾರಿಸುವುದಾಗಿ ತಿಳಿಸಿದರು.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನ ಆಧರಿತ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸ್ಪೇಟೆ ಸಮೀಪ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ. ಕ್ಲಸ್ಟರ್ಸ್ ಸ್ಥಾಪಿಸಲಾಗುವುದು.
ಹುಬ್ಬಳ್ಳಿ ವಿಮಾನ ನಿಲ್ದಾಣ ಬಳಿ 200 ಎಕರೆ ವಿಸ್ತಾರದಲ್ಲಿ 400ಕ್ಕೂ ಹೆಚ್ಚು ನವೋದ್ಯಮಗಳಿಗೆ ಸೌಲಭ್ಯ ಕಲ್ಪಿಸುವ ಸ್ಟಾರ್ಟಪ್ ಪಾರ್ಕ್, ವಿಜಯಪುರದ ತಿಡಗುಂದಿಯಲ್ಲಿ 1,200 ಎಕರೆ ವಿಸ್ತೀರ್ಣದಲ್ಲಿ ಸೋಲಾರ್ ಸೆಲ್ ಮತ್ತು ಆಗ್ರೊ ಟೆಕ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದರು.

60 ಕ್ಕೂ ಹೆಚ್ಚು ಸ್ಟಾರ್ಟಪ್
ಭವಿಷ್ಯದ ತಯಾರಿಕಾ ವಲಯ, ಸಾರಿಗೆ ಮತ್ತು ಪರಿಸರಸ್ನೇಹಿ ಇಂಧನ ಉತ್ಪಾದನೆ ವಲಯಗಳಿಗೆ ವಿಶೇಷ ಗಮನ ಕೊಡಲಾಗುತ್ತಿದೆ, ಇದರ ಅಂಗವಾಗಿ 60ಕ್ಕೂ ಹೆಚ್ಚು ಸ್ಟಾರ್ಟಪ್ ಕಂಪನಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ಆಧರಿಸಿ ರೂಪಿಸಿರುವ ಪರಿಹಾರೋಪಾಯ ಪ್ರದರ್ಶಿಸಲಿವೆ.
ಇವುಗಳಲ್ಲಿ ಕಾರ್ಬನ್ ನ್ಯಾನೋಟ್ಯೂಬ್, ಅಟಾನಮಸ್ ಸಿಸ್ಟಮ್ಸ್, ಮಾನವರಹಿತ ಏರಿಯಲ್ ವೆಹಿಕಲ್ಸ್ ಮತ್ತು ಸುಧಾರಿತ ರೋಬೋಟಿಕ್ಸ್ ಮುಂತಾದವು ಸೇರಿವೆ.
ಸಮಾವೇಶದಲ್ಲಿ 19 ರಾಷ್ಟ್ರಗಳು ಪಾಲ್ಗೊಳ್ಳುತ್ತಿದ್ದು, 10 ರಾಷ್ಟ್ರಗಳೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆ, ಹೂಡಿಕೆಗೆ ಇರುವ ಅವಕಾಶಗಳು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ಸ್ಥಾನಮಾನ, ರಾಜ್ಯದಲ್ಲಿ ಮರುಬಳಕೆ ಇಂಧನ ಕ್ಷೇತ್ರದ ಭವಿಷ್ಯ, ಆರೋಗ್ಯ ಸೇವೆ ಮುಂತಾದ ನಿರ್ಣಾಯಕ ಕ್ಷೇತ್ರಗಳ ಕುರಿತು ಚರ್ಚಿಸಲಾಗುವುದು ಎಂದರು.
ಉದ್ಯಮಗಳಿಗೆ ಪುರಸ್ಕಾರ
ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ ರಾಜ್ಯದ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪುರಸ್ಕರಿಸಲಾಗುತ್ತಿದೆ, ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ/ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳಿದ್ದು, ಈ ಕಾರ್ಯಕ್ರಮ ಫೆಬ್ರವರಿ 12ರ ಸಂಜೆ ನಡೆಯಲಿದೆ.
ಉದ್ಯಮಗಳಿಗೆ ಒಂದು ಬಾರಿಯ ಗರಿಷ್ಠ ಬಂಡವಾಳ ಹೂಡಿಕೆ ಮಾಡಿರುವ ಕಂಪನಿಗಳು ಮತ್ತು ಜಾಗತಿಕ ಮಟ್ಟದ ಸಂಶೋಧನೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿರುವ ಉದ್ದಿಮೆಗಳನ್ನೂ ವಿಶೇಷವಾಗಿ ಪರಿಗಣಿಸಿ, ಪುರಸ್ಕರಿಸಲಾಗುವುದು.
ಕೈಗಾರಿಕಾ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ 35ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಸ್ತರದ ಕೈಗಾರಿಕೆಗಳು, ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳಾ ಉದ್ಯಮಿಗಳು, ವಲಯವಾರು ಕೈಗಾರಿಕಾ ಉತ್ಕೃಷ್ಟತೆ ಸಾಧಿಸಿರುವ ಉದ್ಯಮಗಳಿಗೆ ಫೆಬ್ರವರಿ 13ರ ಸಂಜೆ ಪ್ರಶಸ್ತಿ ಪುರಸ್ಕಾರ ಕೊಡಲಾಗುವುದು.
3 ಲಕ್ಷ ಡಾಲರ್ ಬಹುಮಾನ
‘ವೆಂಚುರೈಸ್’ ಉಪಕ್ರಮದಡಿ ಒಟ್ಟು 3 ಲಕ್ಷ ಡಾಲರ್ ಮೌಲ್ಯದ 9 ಬಹುಮಾನ ಪ್ರದಾನ ಮಾಡಲಾಗುವುದು, ಇದರಲ್ಲಿ ಮೊದಲ ಮೂರು ಸ್ಥಾನಗಳಿಗೆ ಕ್ರಮವಾಗಿ 50 ಸಾವಿರ ಡಾಲರ್, 30 ಸಾವಿರ ಡಾಲರ್ ಮತ್ತು 20 ಸಾವಿರ ಡಾಲರ್ ನಗದು ಪುರಸ್ಕಾರವಿದೆ ಎಂದರು.
ಸಮಾವೇಶವನ್ನು ಫೆಬ್ರವರಿ 11ರ ಸಂಜೆ ೪ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದರು.
ಫೆಬ್ರವರಿ 11 ರಿಂದ 14ರ ನಡುವೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್, ಪ್ರಹ್ಲಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪಿಯೂಷ್ ಗೋಯಲ್ ಪಾಲ್ಗೊಳ್ಳಲಿದ್ದು, ಸಮಾರೋಪಕ್ಕೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದರು.
ಅನೇಕ ಚರ್ಚಾ ಗೋಷ್ಠಿಗಳು
ಸಮಾವೇಶದಲ್ಲಿ ಮಹತ್ವಾಕಾಂಕ್ಷಿ ಕ್ವಿನ್ ಸಿಟಿ ಯೋಜನೆ ಸಂಬಂಧ ದೇಶ-ವಿದೇಶದ ಕೆಲವು ವಿಶ್ವವಿದ್ಯಾಲಯಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು, ಆರ್ಥಿಕ ಬೆಳವಣಿಗೆ ಕುರಿತು ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಲಾಜಿಸ್ಟಿಕ್ಸ್ ವಲಯದಲ್ಲಿ ನಡೆಯುತ್ತಿರುವ ಆವಿಷ್ಕಾರಗಳನ್ನು ಕುರಿತು ವೋಲ್ವೊ ಸಮೂಹದ ಮುಖ್ಯಸ್ಥ ಮಾರ್ಟಿನ್ ಲುಂಡ್ ಸ್ಟೆಡ್, ಸಂದೀಪ್ ದೇಶಮುಖ್ ಮತ್ತು ಚಾಣಕ್ಯ ಹೃದಯ, ಯುವ ಸಂಶೋಧಕರ ಕುರಿತು ಝೆರೋದಾ ಸಂಸ್ಥಾಪಕ ನಿಖಿಲ್ ಕಾಮತ್, ಉದ್ಯಮಿಗಳಾದ ಪಾರ್ಥ ಜಿಂದಾಲ್ ಹಾಗೂ ಸುಝಾನಾ ಮುತ್ತೂಟ್ ಮಾತುಕತೆ ನಡೆಸಲಿದ್ದಾರೆ.
ಈ ಬಾರಿಯ ಸಮಾವೇಶದಲ್ಲಿ ಹೆಚ್ಚು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ, ಇವುಗಳಲ್ಲಿ ಗೂಗಲ್ ಎಕ್ಸ್ ಸಂಸ್ಥಾಪಕ ಸೆಬಾಸ್ಟಿಯನ್ ತ್ರನ್, ಲ್ಯಾಮ್ ರೀಸರ್ಚ್ ಮುಖ್ಯಸ್ಥ ಪ್ಯಾಟ್ರಿಕ್ ಲಾರ್ಡ್, ಜನರಲ್ ಅಟಾಮಿಕ್ಸ್ ಗ್ಲೋಬಲ್ ಕಾರ್ಪೊರೇಷನ್ ಸಿಇಒ ವಿವೇಕ್ ಲಾಲ್, ಟಿವಿಎಸ್ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು, ಬೋಯಿಂಗ್ ಕಂಪನಿಯ ಉನ್ನತಾಧಿಕಾರಿ ರಾಬ್ ಬಾಯ್ಡ್, ನಥಿಂಗ್ ಕಂಪಬಿಯ ಸಹ ಸಂಸ್ಥಾಪಕ ಅಕಿಸ್ ಇವ್ಯಾಂಜಿಲೈಡಿಸ್, ಗ್ರೀಸ್ ದೇಶದ ಮಾಜಿ ಪ್ರಧಾನಿ ಜಾರ್ಜ್ ಪೆಪೆಂಡ್ರಿಯೊ ಮುಂತಾದವರು ಮಾತನಾಡಲಿದ್ದಾರೆ ಎಂದು ಪಾಟೀಲ್ ತಿಳಿಸಿದರು.