ಬೆಂಗಳೂರು:ಬೊಕ್ಕಸ ಬರಿದಾಗಿಲ್ಲ, ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂಬುದಾಗಿ ಸುಳ್ಳು ಹೇಳುತ್ತಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಗುತ್ತಿಗೆದಾರರ 64,000 ಕೋಟಿ ರೂ. ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ಟೀಕಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಬಳಿ ರಸ್ತೆಗಳ ಗುಂಡಿಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತು ಅಕ್ಷರಶಃ ನಿಜ ಎಂದಿದ್ದಾರೆ.
ಒಂದು ಗುದ್ದಲಿ ಪೂಜೆಯೂ ನಡೆದಿಲ್ಲ
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳೇ ಆಗಿಲ್ಲ, ಕಳೆದ 20 ತಿಂಗಳಲ್ಲಿ ಒಂದೇ ಒಂದು ಹೊಸ ಕಾಮಗಾರಿಗೂ ಗುದ್ದಲಿ ಪೂಜೆ ನಡೆದಿಲ್ಲ, ಗುತ್ತಿಗೆದಾರರ ಬಿಲ್ ಬಾಕಿ ಪಾವತಿ ಮಾಡದಿದ್ದರೆ ಜಾರಿಯಲ್ಲಿರುವ ಕಾಮಗಾರಿಗಳೂ ನಿಲ್ಲುತ್ತವೆ, ಅಲ್ಲದೆ, ಸರ್ಕಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗುತ್ತವೆ.
ಸಿದ್ದರಾಮಯ್ಯ ಅಧಿಕಾರದ ದುರಾಸೆಗೆ ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ದುಸ್ಥಿತಿಗೆ ತಂದಿಟ್ಟಿದ್ದಾರೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳುಗೆಡವಿ 16 ಬಜೆಟ್ ಮಂಡಿಸುವ ದಾಖಲೆ ಬರೆದರೇನು, ಎರಡೆರಡು ಬಾರಿ ಮುಖ್ಯಮಂತ್ರಿ ಆದರೇನು, ಕರ್ನಾಟಕ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದೇ ನಿಮ್ಮನ್ನು ಇತಿಹಾಸ ನೆನಪಿಡಲಿದೆ ಎಂದು ವ್ಯಂಗ್ಯವಾಡಿದ್ದಾರೆ.