ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತೀ ಹಂತದಲ್ಲಿಯೂ ಕಮೀಷನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ನೇರ ಆರೋಪ ಮಾಡಿದ್ದಾರೆ.
ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಹೇಳಿಕೆಗಳೇ ಸಾಕ್ಷಿಯಾಗಿದೆ.
ಕಮಿಷನ್ ಹಾವಳಿ
ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ಕುರಿತ ಆಡಿಯೋ ವೈರಲ್ ಆಗಿದೆ, ಇದು ಆಶ್ಚರ್ಯದ ವಿಷಯವೇ ಅಲ್ಲ, ಭ್ರಷ್ಟಾಚಾರ ಅಷ್ಟರ ಮಟ್ಟಿಗೆ ಮಿತಿ ಮೀರಿದೆ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು ಮತ್ತು ಮುಖ್ಯಮಂತ್ರಿ ಸಲಹೆಗಾರರು ನೀಡಿರುವ ಹೇಳಿಕೆ ನಿಮಗೆ ಅಚ್ಚರಿನಾ ಎಂಬುದಾಗಿ ಸುದ್ದಿಗಾರರನ್ನು ಪ್ರಶ್ನಿಸಿದರಲ್ಲದೆ, ಇದು ನಿರಂತರವಾಗಿ ನಡೆಯುತ್ತಲೇ ಇದೆ, ಸೈಟ್ ಕೊಡಬೇಕಾದರೆ, ದುಡ್ಡು, ಗುತ್ತಿಗೆ ಹಣ ನೀಡಲು ಕಮಿಷನ್, ಸರ್ಕಾರದ ಎಲ್ಲ ಇಲಾಖೆಗಳದ್ದೂ ಇದೇ ಕರ್ಮ.
ಯಾವುದಕ್ಕೆ ಎಷ್ಟೆಷ್ಟು ರೇಟ್
ಕೃಷ್ಣಬೈರೇಗೌಡ ಏನು ಹೇಳಿದ್ದಾರೆ ಎಂಬುದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, ಯಾವುದಕ್ಕೆ ಎಷ್ಟೆಷ್ಟು ರೇಟ್ ಫಿಕ್ಸ್ ಮಾಡಿದ್ದಾರೆ ಎಂಬುದಾಗಿ ಅವರು ನೇರವಾಗಿ ಹೇಳಿದ್ದಾರೆ, ತಮ್ಮ ಇಲ್ಲಾಖೆಗಳಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದು ಆಯಾ ಇಲಾಖೆಯ ಮಂತ್ರಿಗಳಿಗೆ ಗೊತ್ತಿದೆ.
ಕೃಷ್ಣಬೈರೇಗೌಡ ಅವರ ಇಲಾಖೆಯಲ್ಲಿ ಯಾವ ರೀತಿ ಕೆಲಸ ನಡೆಯುತ್ತಿದೆ ಎಂಬುದನ್ನು ಅವರೇ ಹೇಳಿದ್ದಾರೆ, ಈ ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಉದಾಹರಣೆ ಬೇಕೆ.
ಬಿ.ಆರ್.ಪಾಟೀಲ್ ಹೇಳಿಕೆ
ಬಿ.ಆರ್.ಪಾಟೀಲ್ ಹೇಳಿರುವುದು ನಿಜ, ವಸತಿ ಇಲಾಖೆಯಲ್ಲಿ ಹಣ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆ ಆಗುತ್ತಿದೆ ಎಂದಿದ್ದಾರೆ, ಇದನ್ನು ನಾನಾಗಲಿ, ವಿರೋಧ ಪಕ್ಷವಾಗಲಿ ಹೇಳುತ್ತಿಲ್ಲ, ಸಾಕ್ಷಾತ್ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ಮುಖ್ಯಮಂತ್ರಿಗಳ ಸಲಹೆಗಾರರೇ ಹೇಳಿದ್ದಾರೆ, ಈಗ ಚೆನ್ನಾಗಿ ಹಣ ಲೂಟಿ ಹೊಡೆದರೆ ಮುಂದೆ ಚುನಾವಣೆ ನಡೆಸಬಹುದು ಎಂಬುದು ಇವರ ಉದ್ದೇಶ ಎಂದರು.
ಕೇತಗಾನಹಳ್ಳಿ ಭೂಮಿ ವಿಷಯಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮಾಡುತ್ತಿದ್ದೇನೆ, ಕಾನೂನು ವ್ಯಾಪ್ತಿಯಲ್ಲಿ ಖರೀದಿಸಿರುವುದಾಗಿ ನಾನು ಮೊದಲೇ ಹೇಳಿದ್ದೇನೆ, ರಾಜ್ಯ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
ಭೂಮಿ ವಿವಾದ ತನಿಖೆಗೆ ರಚಿಸಿರುವ ಎಸ್ಐಟಿ ಕಾರ್ಯಕ್ಕೆ ಹೈಕೋರ್ಟ್ ತಡೆ ನೀಡಿದ್ದು, ೪೦ ವರ್ಷಗಳ ಹಿಂದೆ ಖರೀದಿ ಮಾಡಿದ ಭೂಮಿ, ಯಾವುದೇ ಒತ್ತುವರಿ ಆಗಿಲ್ಲ, ನ್ಯಾಯಾಲಯದಲ್ಲಿ ತೀರ್ಮಾನ ಆಗುತ್ತದೆ.
ದ್ವೇಷ ರಾಜಕಾರಣ
ರಾಜ್ಯ ಸರ್ಕಾರ ಕೇಂದ್ರದ ಮೇಲೆ ರಾಜಕೀಯ ದ್ವೇಷ ಆರೋಪ ಮಾಡುತ್ತಿದೆ, ಕರ್ನಾಟಕದಲ್ಲಿ ಇವರು ಮಾಡುತ್ತಿರುವುದು ಏನು, ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಇಟ್ಟುಕೊಂಡು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ, ಇದಕ್ಕೆಲ್ಲ ಕಾಲವೇ ಉತ್ತರ ನೀಡುತ್ತದೆ ಎಂದರು.
ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ನಾನೇ ಬಟ್ಟೆ ಹೊಲಿಸಿಕೊಡುತ್ತೇನೆ ಎಂಬ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಅಹಂಕಾರದ ಮಾತುಗಳು, ನನಗೆ ಅಂತಹ ದಾರಿದ್ರ್ಯ ಇನ್ನೂ ಬಂದಿಲ್ಲ.
ಮನುಷ್ಯತ್ವದ ದಾರಿದ್ರ್ಯ
ಆ ವ್ಯಕ್ತಿಯಿಂದ ಬಟ್ಟೆ ಹೊಲಿಸಿಕೊಳ್ಳುವಷ್ಟು ದಾರಿದ್ರ್ಯ ಈ ನಾಡಿನ ಜನತೆ ನನಗೆ ಕೊಟ್ಟಿಲ್ಲ, ದಾರಿದ್ರ್ಯ ಇರುವುದು ಅವರಿಗೆ, ಮನುಷ್ಯತ್ವದ ದಾರಿದ್ರ್ಯ ಅವರಿಗಿದೆ.
ಜನರಿಂದ ಕೊಳ್ಳೆ ಹೊಡೆದ ಪಾಪದ ಹಣದಿಂದ ನಾನು ಬಟ್ಟೆ ಹೊಲಿಸಿಕೊಳ್ಳಬೇಕೇ, ನನಗೆ ಬಟ್ಟೆ ಬೇಕಾದರೆ ನಾಡಿನ ಜನರಿದ್ದಾರೆ, ನನ್ನನ್ನು ಇಲ್ಲಿಯವರೆಗೂ ಬೆಳೆಸಿರುವ ಅವರೇ ತಂದು ಕೊಡುತ್ತಾರೆ, ಪಾಪದ ಹಣ, ಲೂಟಿ ಹೊಡೆದಿರುವ ಹಣದಿಂದ ಬಟ್ಟೆ ತರಿಸಿಕೊಳ್ಳಬೇಕಾ ಎಂದು ವಾಗ್ದಾಳಿ ನಡೆಸಿದರು.

