ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಕಣಕ್ಕಿಳಿಯದಿರಲು ನಿರ್ಧರಿಸಿದ್ದಾರೆ.
ಪ್ರಸಕ್ತ ವಿಧಾನಸಭಾ ಅವಧಿ ಪೂರ್ಣಗೊಳ್ಳುತ್ತಿದ್ದಂತೆ ಚುನಾವಣಾ ಕಣಕ್ಕಿಳಿಯದಿರಲು ತೀರ್ಮಾನಿಸಿರುವ ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುವುದಾಗಿ ಹೇಳಿದ್ದಾರೆ.
ಕೊನೆ ಚುನಾವಣೆ ಎಂದಿದ್ದರು
ಕಳೆದ ವಿಧಾಸಭಾ ಚುನಾವಣೆ ಸಂದರ್ಭದಲ್ಲೇ ಇದು ನನ್ನ ಕೊನೆ ಚುನಾವಣೆ ಎಂದಿದ್ದರು, ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಬಲಿಗರ ಒತ್ತಾಯಕ್ಕೆ ಮಣಿದು ತಮ್ಮ ನಿರ್ಧಾರವನ್ನು ಬದಲಿಸಿದ್ದರು.
ಬುಧವಾರ ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನ ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮ ಆಪ್ತ ಸಚಿವರೊಂದಿಗೆ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ಸಂದರ್ಭದಲ್ಲಿ ಇನ್ನು ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಾಯಕತ್ವ ಕುರಿತಂತೆ ಸಂಪುಟ ಸಭೆಯಲ್ಲೇ ಒಂದು ಸಾಲಿನ ನಿರ್ಣಯ ಕೈಗೊಳ್ಳುವಂತೆ ಕೆಲವು ಸಚಿವರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.
ಸಚಿವರ ಒತ್ತಾಸೆ
ಸಚಿವರ ಒತ್ತಾಸೆಗೆ ಒಲವು ತೋರದ ಸಿದ್ದರಾಮಯ್ಯ, ಪ್ರಸಕ್ತ ಸನ್ನಿವೇಶದಲ್ಲಿ ಇಂತಹ ನಿರ್ಣಯದಿಂದ ಪಕ್ಷದ ವರಿಷ್ಠರಿಗೆ ತಪ್ಪು ಸಂದೇಶ ಕಳುಹಿಸಿದಂತಾಗುತ್ತದೆ.
ನಾಯಕತ್ವ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ, ಈ ವಿಷಯದಲ್ಲಿ ಸಾರ್ವಜನಿಕವಾಗಿ ಹೇಳಿಕೆ ನೀಡಿ ಗೊಂದಲ ಎಬ್ಬಿಸುವುದು ಬೇಡ, ಏನು ಹೇಳಬೇಕೋ ಅದನ್ನು ನಾನೇ ಮಾಧ್ಯಮದ ಮುಂದೆ ಹೇಳುತ್ತೇನೆ ಎಂದರು.
ಈ ಬೆಳವಣಿಗೆ ನಂತರ ನಂದಿಬೆಟ್ಟದ ಕೆಳಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬ ಘೋಷಣೆ ಮಾಡಿದರು.

ಮತ್ತೆ ದೆಹಲಿ ಭೇಟಿ
ಇದಕ್ಕೂ ಮುನ್ನ ಸಂಪುಟ ಸಭೆಯಲ್ಲೇ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಹಿಂತಿರುಗಿದ ನಂತರ ನಾನು ಮತ್ತೆ ದೆಹಲಿಗೆ ತೆರಳಿ ಅವರನ್ನು ಭೇಟಿ ಮಾಡಿ, ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡುತ್ತೇನೆ.
ವಿಧಾನ ಪರಿಷತ್ತಿನ ತೆರವಾಗಿರುವ ನಾಲ್ಕು ಸ್ಥಾನಗಳ ಭರ್ತಿ, ಹಿಂದುಳಿದ ಆಯೋಗದ ಸಮೀಕ್ಷೆ ಸೇರಿದಂತೆ ಹಲವು ವಿಚಾರ ಪ್ರಸ್ತಾಪ ಮಾಡುತ್ತೇನೆ.
ರಾಹುಲ್ ಕೊಡುವ ಸಲಹೆ-ಸೂಚನೆಯಂತೆ ನಡೆದುಕೊಳ್ಳುತ್ತೇನೆ, ಅವರ ಮಾತುಗಳನ್ನು ಉಲ್ಲಂಘಿಸಿ ನಾನು ಯಾವುದೇ ತೀರ್ಮಾನ ಕೈಗೊಳ್ಳಲಾಗದು ಎಂದಿದ್ದಾರೆ.

