ನಾಳೆ ಶಿಕ್ಷೆ ಪ್ರಮಾಣ ಪ್ರಕಟಿಸಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
ಬೆಂಗಳೂರು:ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಲ್ಲಿ ಮಹತ್ವದ ತೀರ್ಪು ನೀಡಿದೆ.
ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಮಾಣದ ಬಗ್ಗೆ ನ್ಯಾಯಾಲಯ ನಾಳೆ ಪ್ರಕಟಿಸಲಿದೆ.
ಮೈಸೂರಿನ ಕೆ.ಆರ್.ನಗರದ ಮಹಿಳೆಯ ಅಪಹರಣ ಹಾಗೂ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.
ನಾಲ್ಕು ಅತ್ಯಾಚಾರ ಪ್ರಕರಣಗಳು
ಇದರೊಂದಿಗೆ ನಾಲ್ಕು ಅತ್ಯಾಚಾರ ಪ್ರಕರಣಗಳ ಪೈಕಿ ಪ್ರಜ್ವಲ್ ವಿರುದ್ಧ ತೀರ್ಪು ಹೊರಬಿದ್ದ ಮೊದಲ ಪ್ರಕರಣ ಇದಾಗಿದೆ.
ತೀರ್ಪು ಪ್ರಕಟಿಸುತ್ತಿದ್ದಂತೆ ಪ್ರಜ್ವಲ್ ತಲೆ ತಗ್ಗಿಸಿ, ಕಣ್ಣೀರು ಸುರಿಸುತ್ತಾ ನ್ಯಾಯಾಲಯ ಆವರಣದಿಂದ ನಿರ್ಗಮಿಸಿದರು, ನಂತರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.
ಪ್ರಕರಣದ ತೀರ್ಪನ್ನು ಜುಲೈ 30ರಂದೇ ಪ್ರಕಟಿಸಬೇಕಿತ್ತು, ಆದರೆ, ಕೆಲವು ಸ್ಪಷ್ಟೀಕರಣದ ಹಿನ್ನೆಲೆಯಲ್ಲಿ ಕಾಯ್ದಿರಿಸಿದ್ದ ತೀರ್ಪನ್ನು ಇಂದು ಪ್ರಕಟಿಸಲಾಯಿತು.
ಕನಿಷ್ಠ 10 ವರ್ಷ ಶಿಕ್ಷೆ
ಈ ಅಪರಾಧಕ್ಕೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಪಡುವ ಸಾಧ್ಯತೆ ಇದೆ.
ವಿಶೇಷ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಜುಲೈ 29 ರಂದು ಪೂರ್ಣಗೊಳಿಸಿತ್ತು.
ಪ್ರಾಸಿಕ್ಯೂಷನ್ ಹಾಗೂ ಆರೋಪಿಗಳ ಪರ ವಕೀಲರು ಗೂಗಲ್ ಮ್ಯಾಪ್ ಸಹಾ ಸಾಕ್ಷ್ಯವನ್ನಾಗಿಸಿ ವಾದ ಮಂಡಿಸಿದ್ದರು, ಆದರೆ, ಗೂಗಲ್ ಕಂಪನಿ ದೃಢೀಕರಣವಿಲ್ಲದೇ ಸಲ್ಲಿಸಿರುವ ಮ್ಯಾಪ್ ಅನ್ನು ಸಾಕ್ಷಿಯನ್ನಾಗಿ ಪರಿಗಣಿಸಬಹುದೇ ಎಂದು ನ್ಯಾಯಾಲಯ ಸ್ಪಷ್ಟನೆ ಕೇಳಿತ್ತು.
ಇದಕ್ಕೆ ಉತ್ತರಿಸಿದ್ದ ಪೋಲಿಸ್ ವರಿಷ್ಠಾಧಿಕಾರಿ, ಅತ್ಯಾಚಾರ ನಡೆದ ಹೊಳೆನರಸೀಪುರ ಫಾರ್ಮ್ ಹೌಸ್ನ ಅಕ್ಷಾಂಶ ಹಾಗೂ ರೇಖಾಂಶವನ್ನು ಮಹಜರು ದಾಖಲೆಯಲ್ಲಿ ನಮೂದಿಸಿ ಸಲ್ಲಿಸಲಾಗಿದೆ, ಕ್ಲಿಕ್ ಮಾಡಿದರೆ ಗೂಗಲ್ ಮ್ಯಾಪ್ನಲ್ಲಿ ಫಾರ್ಮ್ ಹೌಸ್ ಲೊಕೇಷನ್ ಹಾಗೂ 2021ರ ಫೋಟೊ ಲಭಿಸಲಿದ್ದು ದಾಖಲೆಯ ಭಾಗವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.

ಮೊಬೈಲ್ ಫೋನ್ ಜಪ್ತಿ
ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾದ ಸ್ಯಾಮ್ಸಂಗ್ ಜೆ4 ಮೊಬೈಲ್ ಫೋನ್ ಅನ್ನು ತನಿಖಾಧಿಕಾರಿ ಪ್ರಸಕ್ತ ಕೇಸಿನಲ್ಲಿ ಜಪ್ತಿ ಮಾಡಿದ ಬಗ್ಗೆ ಸ್ಪಷ್ಟೀಕರಣ ಬೇಕಿದೆ ಎಂಬುದಾಗಿ ನ್ಯಾಯಾಲಯ ಸ್ಪಷ್ಟೀಕರಣ ಕೇಳಿತ್ತು.
ಇದಕ್ಕೆ ಪ್ರಜ್ವಲ್ ಪರ ವಕೀಲ ವಿಪಿನ್ಕುಮಾರ್ ಜೈನ್ ವಾದ ಮಂಡಿಸಿ, ಬೇರೊಂದು ಮೊಕದ್ದಮೆಗೆ ಸಂಬಂಧಿಸಿದಂತೆ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು, ಸದರಿ ಕೇಸ್ನಲ್ಲಿ ಅಲ್ಲ, ಎಫ್ಎಸ್ಎಲ್ ವರದಿಯಲ್ಲಿ ಫೋನ್ ಸ್ವೀಕರಿಸಿದ ಬಗ್ಗೆ ದಾಖಲೆಯಿಲ್ಲ. ತನಿಖಾಧಿಕಾರಿ ಬಳಿ ಈ ಮೊಬೈಲ್ ಫೋನ್ ಇರಲೇ ಇಲ್ಲ, ಆದ್ದರಿಂದ ಈ ಸಾಕ್ಷ್ಯಕ್ಕೆ ಬೆಲೆಯಿಲ್ಲ ಎಂದಿದ್ದರು.
ಪ್ರಜ್ವಲ್ ರೇವಣ್ಣ ಮೇಲೆ ಸರಣಿ ಅತ್ಯಾಚಾರ ಆರೋಪವಿದ್ದು, ಇದರಲ್ಲಿ ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ.
ಕೃತ್ಯ ಮೊಬೈಲ್ನಲ್ಲಿ ಸೆರೆ
ಪ್ರಜ್ವಲ್ ಮೊದಲ ಬಾರಿಗೆ ಸಂತ್ರಸ್ತೆ ಮೇಲೆ ಹಾಸನ ಜಿಲ್ಲೆ ಹೊಳೆನರಸೀಪುರದ ಗನ್ನಿಗಢ ಫಾರಂ ಹೌಸ್ ಮತ್ತು ನಂತರ ಬೆಂಗಳೂರಿನ ಬಸವನಗುಡಿಯಲ್ಲಿನ ರೇವಣ್ಣ ನಿವಾಸದಲ್ಲಿ ಅತ್ಯಾಚಾರ ಎಸಗಿ, ಕೃತ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದರು ಎಂದು ಆರೋಪಿಸಲಾಗಿತ್ತು.
ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದೆಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದಡಿ ದೂರು ದಾಖಲಾಗಿತ್ತು.
ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ದೊರೆತಿದೆ.

ಸೂರಜ್ ರೇವಣ್ಣ ಫಾರಂ ಹೌಸ್
ಹಾಸನ ಜಿಲ್ಲೆಯ ಹೊಳೆನರಸೀಪುರದ ಗನ್ನಿಗಢ ಫಾರಂ ಹೌಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದೆ.
ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಕಳೆದ ವರ್ಷಾಂತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಪ್ರಜ್ವಲ್ ರೇವಣ್ಣ 2024ರ ಮೇನಲ್ಲಿ ವಿದೇಶದಿಂದ ಮರಳುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು, ಅಂದಿನಿಂದ ಇಂದಿನವರೆಗೂ ಪ್ರಜ್ವಲ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಪ್ರಾಸಿಕ್ಯೂಷನ್ ಪರ ಬಿ.ಎನ್.ಜಗದೀಶ್, ಅಶೋಕ್ ನಾಯಕ್ ಮತ್ತು ಪ್ರಜ್ವಲ್ ಪರ ಅರುಣ್ ಹಾಗೂ ವಿಪುಲ್ ಜೈನ್ ಹಾಜರಿದ್ದರು.


