ಬೆಂಗಳೂರು:ಅಧಿಕಾರದಲ್ಲಿದ್ದಾಗ ಭಷ್ಟಾಚಾರ ಎಸಗಿ ಬಂದ ಹಣವನ್ನು ರಾಷ್ಟ್ರದ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಳಕೆ ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದ್ದಾರೆ.
ಕರ್ನಾಟಕ ಬಿಜೆಪಿ ಸುಳ್ಳಿನ ಕಾರ್ಖಾನೆ, ಬಿಹಾರ ಚುನಾವಣೆಗೆ ನಮ್ಮ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂಬ ಆರೋಪ ಕಪೋಲಕಲ್ಪಿತ.
ಜನಪರ ಕಾರ್ಯಗಳಿಗೆ ಒತ್ತು
ಚುನಾವಣೆಗೆ ಭ್ರಷ್ಟಾಚಾರದ ಹಣ ಬಳಕೆ ಮಾಡುವುದು ನಿಮ್ಮ ಜಾಯಮಾನ, ಕಾಂಗ್ರೆಸ್ನದ್ದಲ್ಲ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಜನಪರ ಕಾರ್ಯಗಳಿಗೆ ಒತ್ತು ನೀಡಿದ್ದೇವೆಯೇ ಹೊರತು ನಿಮ್ಮ ರೀತಿ ಭ್ರಷ್ಟಾಚಾರಕ್ಕಲ್ಲ ಎಂದಿದ್ದಾರೆ.
ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ ಆಡಳಿತಾವಧಿಗಳಲ್ಲಿ ಮಹಾರಾಷ್ಟ್ರ, ಬಿಹಾರ, ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಸೇರಿದಂತೆ ರಾಷ್ಟ್ರದ ಬಹುತೇಕ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆದವು.
ಅಂದು ಕರ್ನಾಟಕದ ಸಂಪತ್ತನ್ನು ಈ ಚುನಾವಣೆಗಳಿಗೆ ನೀವೆಲ್ಲರೂ ಕಳುಹಿಸಿದ್ದಿರಾ, ಜನತೆಯ ಮುಂದೆ ಉತ್ತರಿಸಿ ಎಂದಿದ್ದಾರೆ.
ಪ್ರಜಾಪ್ರಭುತ್ವ ಕಗ್ಗೊಲೆ
ಈ ಸಂಬಂಧ ಹೇಳಿಕೆ ನೀಡಿರುವ ಅವರು, ಹಣದ ಹೊಳೆ ಹರಿಸಿ ಶಾಸಕರನ್ನು ಕುದುರೆಗಳಂತೆ ಖರೀದಿಸಿ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡಿದ ಪಿತಾಮಹರು ನೀವು.
ಭ್ರಷ್ಟಾಚಾರದ ಗಂಗೋತ್ರಿಯಾದ ನೀವು ಇಂದು ಶುದ್ಧ ಹಸ್ತರೆಂದು ಬಿಂಬಿಸಿಕೊಳ್ಳಲು ಹೊರಟಿರುವುದು ನಾಚಿಕೆಗೇಡಿನ ವಿಷಯ.
ಅಧಿಕಾರಕ್ಕಾಗಿ ನೀವು ಖರೀದಿಸಿದ ಕ್ರಿಮಿನಲ್ ಹಿನ್ನೆಲೆ ಶಾಸಕರನ್ನು ರಾಜ್ಯದ ಜನತೆ ಎಂದಿಗೂ ಮರೆಯುವುದಿಲ್ಲ.
ಶೇಕಡ 40 ಕಮೀಷನ್
ಗುತ್ತಿಗೆದಾರರು ಶೇಕಡ 40ರಷ್ಟು ಕಮೀಷನ್ ಆರೋಪ ಮಾಡಿದ್ದು ನಿಮ್ಮ ಆಡಳಿತಾವಧಿಯಲ್ಲೇ ಅಲ್ಲವೆ.
ಅಷ್ಟೇ ಅಲ್ಲ, ಒಂದು ಹೆಜ್ಜೆ ಮುಂದೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು ನಿಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಜಗಜ್ಜಾಹೀರು ಮಾಡಿದ್ದನ್ನು ಮರೆತಿದ್ದೀರಾ.
ನಮ್ಮ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಮೂಲಕ ರಾಜ್ಯದ ಬಡವರ ಖಾತೆಗೆ ನೇರವಾಗಿ ಹಣ ಜಮೆ ಮಾಡುತ್ತಿದೆ, ನಿಮ್ಮಂತೆ ಚುನಾವಣಾ ಬಾಂಡ್ಗಳ ಹೆಸರಿನಲ್ಲಿ ಕಪ್ಪು ಹಣವನ್ನು ಬಿಳಿ ಮಾಡುವ ಚಾಳಿ ನಮಗಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

