ಬೆಳಗಾವಿ:ಬಿಜೆಪಿ ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅಪಪ್ರಚಾರ ಮಾಡುತ್ತಿದ್ದು, ಈ ಕುತಂತ್ರಕ್ಕೆ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಸಲ್ಲಿಸಿದ ಆರೋಪಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ತೀರ್ಮಾನ ಬೆಂಬಲಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗುರಿಯಾಗಿಸಿ, ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ ಎಂದರು.
ಎಫ್ಐಆರ್ ಆಧರಿಸಿಲ್ಲ
ಬಿಜೆಪಿ ನಾಯಕ ಸುಬ್ರಮಣ್ಯಂ ಸ್ವಾಮಿ 2012ರಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಖಾಸಗಿ ಕಿಮಿನಲ್ ದಾವೆ ಹೂಡಿದ್ದರು, ಇದನ್ನು ಆಧರಿಸಿ ಇ.ಡಿ. ಸಲ್ಲಿಸಿದ್ದ ಆರೋಪ ಪಟ್ಟಿ ಎಫ್ಐಆರ್ ಆಧರಿಸದ ಕಾರಣ ಮೊಕದ್ದಮೆಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ದೇಶದ ಜನರಲ್ಲಿ ಸ್ವಾತಂತ್ರ್ಯ ಹೋರಾಟದ ಜಾಗೃತಿ ಮೂಡಿಸಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು 1937ರಲ್ಲಿ ಜವಾಹರ್ ಲಾಲ್ ನೆಹರೂ ಪ್ರಾರಂಭಿಸಿದರು, ಇದು ಕಾಂಗ್ರೆಸ್ ಪಕ್ಷದ ಆಸ್ತಿ, ನಂತರ ಪತ್ರಿಕೆಯನ್ನು ಯಂಗ್ ಇಂಡಿಯಾ ಸಂಸ್ಥೆ ವಹಿಸಿಕೊಂಡಿತು, ಸಂಸ್ಥೆಗೆ ಸೇರಿದ್ದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್ ವಿರುದ್ಧ ಪ್ರಕರಣ ದಾಖಲಿಸಿ, ಇ.ಡಿ. ತನಿಖೆ ಮಾಡಿಸಲಾಯಿತು.
ತೀರ್ಪಿನ ಪರ ಪ್ರತಿಭಟನೆ ಕೈಗೊಂಡಿದ್ದು, ಸದನದ ಒಳಗೆ ಮತ್ತು ಹೊರಗೆ ಮುಂದುವರೆಸುತ್ತೇವೆ, ರಾಜ್ಯ ಹಾಗೂ ದೇಶದುದ್ದಕ್ಕೂ ಬಿಜೆಪಿಯ ಕುತಂತ್ರ ನೀತಿ ವಿರೋಧಿಸಿ ಹೋರಾಟ ಮಾಡುತ್ತೇವೆ, ಕಾಂಗ್ರೆಸ್ ಕೈಕಟ್ಟಿ ಕೂರುವ ಪಕ್ಷವಲ್ಲ ಎಂದರು.
ಜನರ ಮೇಲೆ ಮನಬಂದಂತೆ ತೆರಿಗೆ
ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ, ಹಣದುಬ್ಬರ ಹೆಚ್ಚಿದೆ, ನಿರುದ್ಯೋಗ ಪ್ರಮಾಣ ಏರಿಕೆಯಾಗಿದೆ, ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ.
ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ರೂ. ಇತ್ತು, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ 11 ವರ್ಷಗಳಲ್ಲಿ ಸಾಲದ ಮೊತ್ತ 148 ಲಕ್ಷ ಕೋಟಿ ರೂ.ಗಳಾಗಿದೆ, ಬಿಜೆಪಿ ತನ್ನ ತಪ್ಪು ಮರೆಮಾಚಲು ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ ಎಂದರು.
ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಘೋಷಿಸಿದ್ದರು, ವಿದೇಶದಲ್ಲಿನ ಕಪ್ಪುಹಣ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ. ನೀಡುವುದಾಗಿ ಹೇಳಿದ್ದರು, ಈ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ.
ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು
ದೈನಂದಿನ ಬಳಕೆಯಾದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ, ಇಂತಹ ತಪ್ಪುಗಳನ್ನು ಮರೆಮಾಚಲು ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ.
ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಹೆಸರನ್ನು ವಿಕಸಿತ್ ಭಾರತ್ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ಆರ್ಎಎಂ ಜಿ) ಯೋಜನೆಯೆಂದು ಬದಲಿಸಿದ್ದಾರೆ.
ರಾಜಭವನ ಹೆಸರನ್ನು ಲೋಕಭವನ ಎಂದು ಬದಲಾಯಿಸಿದ್ದಾರೆ, ಇದು ಸರ್ಕಾರದ ಆಸ್ತಿಯಾಗಿದ್ದು, ಹೆಸರು ಬದಲಾವಣೆ ಸರಿಯಲ್ಲ, ಹೊಸ ನಾಮಕರಣ ಕಾರ್ಯದಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸ ಮಾಡುತ್ತಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಗೆ ವಿರೋಧ
ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಗೆ ಬಡವರನ್ನು ಕಂಡರೆ ಆಗುವುದಿಲ್ಲ, ಬಡವರ ಯಾವುದೇ ಯೋಜನೆಗಳಿಗೆ ಬಿಜೆಪಿ ಸಹಮತಿಯಿಲ್ಲ, ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವುದಲ್ಲದೆ, ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನೂ ವಿರೋಧಿಸಿದರು, ಆದರೆ, ಜನಪರ ಯೋಜನೆಗಳನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಪಕ್ಷ, ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ, ಆದರೆ, ದ್ವೇಷ ರಾಜಕಾರಣ ಮಾಡುತ್ತಿದೆ ಎಂದರು.

