ಬೆಂಗಳೂರು:ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲೇ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಂದಿಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಜೊತೆಗೂಡಿ ನಗರದ ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ಮೈಸೂರುವರೆಗೆ ಪರಿವೀಕ್ಷಣೆಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಡೆದ ಇಲಾಖಾ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದರು.
ಬಡ್ತಿ ಮೀಸಲಾತಿ ಚರ್ಚೆಯಲ್ಲಿ
ಇಲಾಖಾ ಬಡ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ.
ರಾಜ್ಯದ 51 ರೈಲು ನಿಲ್ದಾಣಗಳನ್ನು 1900 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು, ಈಗಾಗಲೇ 23 ನಿಲ್ದಾಣಗಳ ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆದಿದೆ.
ಪ್ರಯಾಣಿಕರಿಗೆ ಅಗತ್ಯ ಸೌಕರ್ಯ
ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ನಾವು ಎರಡೂ ನಗರಗಳ ನಡುವೆ ರೈಲಿನಲ್ಲೇ ಪ್ರಯಾಣಿಸುತ್ತಿದ್ದೇವೆ.
ಇದರಿಂದ ಪ್ರಯಾಣಿಕರ ಸಮಸ್ಯೆ ಅರಿತು, ಯಾವ ಸೌಕರ್ಯ ಕಲ್ಪಿಸಬೇಕೆಂಬ ಕುರಿತು ತೀರ್ಮಾನಿಸಲಾಗುವುದು ಎಂದರು.


