ಬೆಂಗಳೂರು:ಸರ್ಕಾರಿ ನೌಕರರಿಗೂ ವೇತನ ನೀಡಲಾಗದಷ್ಟು ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಆಡಳಿತಯಂತ್ರ ಸಂಪೂರ್ಣ ಕುಸಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ, ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದರಲ್ಲೇ ನಿರತವಾಗಿದೆ ಎಂದರು.
ಅಲ್ಪಸಂಖ್ಯಾತರ ಓಲೈಕೆಗೆ ಹಣ
ಸಚಿವ ಸಂಪುಟ ಸಭೆಯಲ್ಲಿ ಅಲ್ಪಸಂಖ್ಯಾತರಿಗೆ ಮತ್ತೆ 650 ಕೋಟಿ ರೂ. ನೀಡಲು ತೀರ್ಮಾನ ಕೈಗೊಳ್ಳಲಾಗಿದೆ, ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಗಳಲ್ಲ, ಆದರೆ ರಾಜ್ಯ ಸರ್ಕಾರ ಪದೇ ಪದೇ ಅಲ್ಪಸಂಖ್ಯಾತರ ಓಲೈಕೆಗೆ ಹಣ ನೀಡುತ್ತಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ಗೆ ಹಿಂದೂಗಳು ಮತ ಹಾಕಿಲ್ಲವೇ, ಹಿಂದೂಗಳಿಗೆ ಅಪಮಾನ ಮಾಡುತ್ತಿರುವುದು ಅಕ್ಷಮ್ಯ ಅಪರಾಧ, ರಾಜ್ಯ ಸರ್ಕಾರದ ಪಾಪದ ಕೊಡ ತುಂಬಿದೆ.
ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರವನ್ನು ಪದೇ ಪದೇ ಕೈಗೊಳ್ಳುತ್ತಿರುವ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ, ಹಿಂದೂಗಳಿಗೆ ಅಪಮಾನ ಸಲ್ಲದು ಎಂದರು.
ಕೇಂದ್ರದ ಮೇಲೆ ಆರೋಪ
ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ಕೇಂದ್ರ ಸರ್ಕಾರದ ಮೇಲೆ ಪದೇ ಪದೇ ಆರೋಪ ಮಾಡುತ್ತಿದೆ, ಕೇಂದ್ರದ ಮೇಲೆ ಆರೋಪ ಹೊರಿಸಲು ಸಂಪುಟ ದರ್ಜೆಯ ಒಬ್ಬ ಸಚಿವರನ್ನು ನೇಮಕ ಮಾಡಿಕೊಳ್ಳಲಿ.
ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಕೈಗೊಂಡಿರುವ ಅಭಿವೃದ್ಧಿ ಏನೆಂದು ರಾಜ್ಯದ ಜನರಿಗೆ ಗೊತ್ತಿದೆ, ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವುದು ಬಿಟ್ಟರೆ ಏನೂ ಮಾಡಿಲ್ಲ.
ಜಲಜೀವನ್ ಮಿಷನ್ ಸೇರಿದಂತೆ ಹಲವು ಯೋಜನೆಗಳಿಗೆ ಕೇಂದ್ರದಿಂದ ಬರುವ ಹಣ ಬಂದೇ ಬರುತ್ತದೆ, ರಾಜ್ಯ ಸರ್ಕಾರ ತನ್ನ ಪಾಲಿನ ಅಭಿವೃದ್ಧಿ ಯೋಜನೆಗೆ ಹಣ ಬಿಡುಗಡೆ ಮಾಡಲಿ.
ಶಾಸಕರಿಗೆ ಹಣ ಬಿಡುಗಡೆ ಮಾಡಿಲ್ಲ
ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ರೂ. ಕೊಡುತ್ತೇವೆ ಎಂಬುದಾಗಿ ಹೇಳಿ ಆರು ತಿಂಗಳಾಯಿತು, ಶಾಸಕರು ಯೋಜನೆ ರೂಪಿಸಿಕೊಂಡು ಕಾಯುತ್ತಿದ್ದಾರೆ, ಆದರೆ ಸರ್ಕಾರ ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ.
ರಾಜ್ಯದ ಸರ್ಕಾರಿ ನೌಕರರಿಗೆ ಎರಡು ತಿಂಗಳಿಂದ ವೇತನ ಬಿಡುಗಡೆ ಮಾಡಿಲ್ಲ, ಇದರಿಂದಲೇ ಈ ಸರ್ಕಾರ ಎಷ್ಟು ದಿವಾಳಿ ಆಗಿದೆ ಎಂಬುದು ತಿಳಿಯುತ್ತದೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಧೋರಣೆಯಿಂದ ಬೇಸರಗೊಂಡು ಬೇರೆ ರಾಜ್ಯಗಳಿಗೆ ಹೋಗಿದ್ದಾರೆ.
ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ, ಕೇಂದ್ರ ಸರ್ಕಾರವನ್ನು ದೂರುವ ಬದಲು ರಾಜ್ಯ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕುರಿತು ಆತ್ಮಾವಲೋಕನ ಮಾಡಿಕೊಳ್ಳಲಿ.
ಆಂತರಿಕ ಕಚ್ಚಾಟ ಹೆಚ್ಚಾಗಿದೆ
ಆಡಳಿತ ಪಕ್ಷದ ಆಂತರಿಕ ಕಚ್ಚಾಟ ಹೆಚ್ಚಾಗಿ, ಮುಖ್ಯಮಂತ್ರಿ ಕುರ್ಚಿಗೆ ದಿನೇ ದಿನೇ ಪೈಪೋಟಿ ನಡೆಯುತ್ತಿದೆ, ಆಡಳಿತ ಪಕ್ಷದ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಒಮ್ಮೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಬಲಿಗರು ದೆಹಲಿಗೆ ಹೋದರೆ ಮತ್ತೊಮ್ಮೆ ಸಿದ್ದರಾಮಯ್ಯ ಬೆಂಬಲಿಗರು ದೆಹಲಿಯಲ್ಲಿ ಬೀಡು ಬಿಡುತ್ತಾರೆ, ಇವರೇನು ನಮ್ಮ ರಾಜ್ಯದ ಶಾಸಕರೋ ಅಥವಾ ದೆಹಲಿ ಶಾಸಕರೋ ಎಂಬ ಅನುಮಾನ ಬರುತ್ತಿದೆ.
ಪೊಲೀಸರ ಕ್ರಮ ಸರಿಯಲ್ಲ
ಧಾರವಾಡದಲ್ಲಿ ಆದಿತ್ಯ ಮ್ಯಾಗೇರಿ ಎಂಬ ಕಾಲೇಜು ವಿದ್ಯಾರ್ಥಿಯನ್ನು ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ವಿನಾಕಾರಣ ಸಿಲುಕಿಸಿ, ನಿರಪರಾಧಿ ಎಂಬುದಾಗಿ ತಿಳಿದ ನಂತರವೂ ತಂದೆ ಇಲ್ಲದ ಯುವಕನ ತಾಯಿಗೆ ಪೀಡಿಸಿ ಸಾವಿರಾರು ರೂ. ವಸೂಲಿ ಮಾಡಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆ ಎಷ್ಟು ಕೀಳುಮಟ್ಟಕ್ಕೆ ಇಳಿದಿದೆ ಎಂಬುದು ಇದರಿಂದ ಗೊತ್ತಾಗುತ್ತದೆ, ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಮಾನ ಮರ್ಯಾದೆ ಇದ್ದರೆ ಈ ಘಟನೆಯಿಂದ ಎಚ್ಚೆತ್ತುಕೊಂಡು ಪ್ರಕರಣದ ಹಿಂದೆ ಇರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಮೃತನ ಬಡ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಕೊಡಬೇಕು ಎಂದರು.


