ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನ ಅಧಿಕಾರ ಹಸ್ತಾಂತರ ಗೊಂದಲಕ್ಕೆ ಕಾಂಗ್ರೆಸ್ ವರಿಷ್ಠರು ಅಂತು ಮಂಗಳವಾರ ತೆರೆ ಎಳೆಯಲಿದ್ದಾರೆ.
ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಪ್ರತ್ಯೇಕವಾಗಿ ಸಂಪರ್ಕಿಸಿ, ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
ವರಿಷ್ಠರ ಆದೇಶದ ಮೇರೆಗೆ ಉಭಯ ನಾಯಕರು ಸೋಮವಾರ ರಾತ್ರಿ ದೆಹಲಿಗೆ ತೆರಳಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಇಂದಿರಾಭವನದಲ್ಲಿ ಕರ್ನಾಟಕ ಕಾಂಗ್ರೆಸ್ ಗೊಂದಲದ ನಿವಾರಣೆಗೆ ಮಹತ್ವದ ಸಭೆ ನಡೆಯಲಿದೆ.
ಸಭೆಯಲ್ಲಿ ನಾಯಕತ್ವ ವಿಚಾರವಷ್ಟೇ ಅಲ್ಲದೆ, ಸಂಪುಟ ಪುನಾರಚನೆ, ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನಪರಿಷತ್ತಿಗೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿರುವ ಸಭೆಯಲ್ಲಿ ಪಕ್ಷದ ಅಧಿನಾಯಕ ರಾಹುಲ್ಗಾಂಧಿ, ಎಐಸಿಸಿ ಕಾರ್ಯದರ್ಶಿಗಳಾದ ವೇಣುಗೋಪಾಲ್, ಸುರ್ಜೆವಾಲ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತಕ್ಕೆ ಎರಡೂವರೆ ವರ್ಷಗಳು ತುಂಬುತ್ತಿದ್ದಂತೆ ಕಳೆದ ಆರೇಳು ತಿಂಗಳಿನಿಂದಲೂ ಅಧಿಕಾರ ಹಸ್ತಾಂತರ ವಿಚಾರ ಹಾದಿ ಬೀದಿಯಲ್ಲಿ ಚರ್ಚೆಗೆ ಗ್ರಾಸವಾಗಿ ಕಾಂಗ್ರೆಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು.
ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪೂರ್ಣಗೊಂಡು, ರಾಜ್ಯಸಭಾ ಚುನಾವಣೆ ಎದುರಾಗಿರುವ ಬೆನ್ನೆಲ್ಲೇ, ರಾಹುಲ್ಗಾಂಧಿ ಕರ್ನಾಟಕಕ್ಕೆ ಹೊಸ ಸೂತ್ರ ನೀಡಿ, ನಾಯಕತ್ವದ ವಿಚಾರ ಬಗೆಹರಿಸಲು ಹೊರಟಿದ್ದಾರೆ.
ರಾಜ್ಯ ವಿಧಾನ ಸಭೆಯಿಂದ ರಾಜ್ಯ ಸಭೆಗೆ ನಡೆಯುತ್ತಿರುವ ದೈವಾರ್ಷಿಕ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರಿಗೆ ಅವಕಾಶ ಮಾಡಿಕೊಟ್ಟು, ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡುವುದರ ಮೂಲಕ ಮುಖ್ಯಮಂತ್ರಿ ಸ್ಥಾನದಿಂದ ಗೌರವವಾಗಿ ಇಳಿಸಿ, ರಾಷ್ಟ್ರ ರಾಜಕಾರಣಕ್ಕೆ ಬಳಸಿಕೊಳ್ಳಲು ರಾಹುಲ್ಗಾಂಧಿ ಮುಂದಾಗಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಮಟ್ಟದಲ್ಲಿ ಹಿಂದುಳಿದ ವರ್ಗಗಳನ್ನು ಒಂದು ಮಾಡುವ ಉದ್ದೇಶದಿಂದ ಸಿದ್ದರಾಮಯ್ಯ ಅವರನ್ನೇ ಮುಂಚೂಣಿಗೆ ತರಲು ರಾಹುಲ್ ಚಿಂತನೆ ನಡೆಸಿದ್ದಾರೆ.
ರಾಜ್ಯಸಭಾ ಚುನಾವಣೆ ಅಸ್ತ್ರವಾಗಿ ಮಾಡಿಕೊಂಡು ಕರ್ನಾಟಕ ಕಾಂಗ್ರೆಸ್ ಗೊಂದಲವನ್ನು ಬಗೆಹರಿಸಲು ಶಿವಕುಮಾರ್ಗೆ ಪಟ್ಟಕಟ್ಟುವ ಉದ್ದೇಶವು ಇದಾಗಿದೆ.
ಮುಖ್ಯಮಂತ್ರಿಯವರಿಗೂ ರಾಹುಲ್ ಅವರ ಚಿಂತನೆ ಅರಿವಿಗೆ ಬಂದಿದೆ. ಅವರು ಈ ಸಂಬಂಧ ಆಪ್ತ ಸಚಿವರೊಟ್ಟಿಗೆ ಈಗಾಗಲೇ ಚರ್ಚೆ ಮಾಡಿದ್ದಾರೆ.
ಈ ವಿಷಯ ಪ್ರಸ್ತಾಪಗೊಂಡರೆ, ತಾವು ರಾಜ್ಯ ರಾಜಕಾರಣದಲ್ಲೇ ಮುಂದುವರೆಯುತ್ತೇನೆ. ತಮಗೆ ಮಂತ್ರಿಮಂಡಲ ಪುನಾರಚನೆಗೆ ಅವಕಾಶ ಮಾಡಿಕೊಡಿ ಎಂದು ರಾಹುಲ್ ಅವರಿಗೆ ಚರ್ಚೆ ಸಂದರ್ಭದಲ್ಲೇ ಮನವಿ ಮಾಡಿಕೊಳ್ಳಲಿದ್ದಾರೆ.
ಒಂದು ವೇಳೆ ರಾಹುಲ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ, ರಾಜ್ಯಸಭಾ ಸ್ಥಾನ ಸ್ವೀಕರಿಸಲು ಸಮ್ಮತಿಸಿ, ತಮ್ಮಿಂದ ತೆರವಾಗುವ ಸ್ಥಾನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಯ್ಕೆ ಮಾಡಿ ಎಂದು ಕೋರಲಿದ್ದಾರಂತೆ.
ರಾಜ್ಯ ನಾಯಕತ್ವ ಸಂಬಂಧ ರಾಹುಲ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ.
ಕೊನೆಯವರೆಗೂ ನನ್ನ ಪ್ರಯತ್ನವನ್ನು ಮುಂದುವರೆಸುವುದಾಗಿಯೋ ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲ, ವರಿಷ್ಠರ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ದೆಹಲಿಗೆ ತಮ್ಮ ಆಪ್ತ ಸಚಿವರಾದ ಪರಮೇಶ್ವರ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಡಾ. ಹೆಚ್.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್ ಸೇರಿದಂತೆ ಕೆಲವು ಸಚಿವರು, ಶಾಸಕರನ್ನು ತಮ್ಮ ಜೊತೆ ಕರೆದುಕೊಂಡು ಹೋಗಿದ್ದಾರೆ.


