ಬೆಂಗಳೂರು:ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಭಾವಿಗಳಾಗಿ ಪ್ರಮುಖ ಖಾತೆ ನಿರ್ವಹಿಸಿದ್ದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಸೇರಿದಂತೆ 12ಕ್ಕೂ ಹೆಚ್ಚು ಮಂದಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂತ್ರಿಮಂಡಲದಲ್ಲಿ ಅವಕಾಶ ಇಲ್ಲ.
ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿದ್ದ ತಮ್ಮನ್ನೂ ಸೇರಿದಂತೆ 12 ಮಂದಿಗೆ ಅವಕಾಶ ನೀಡಿ ಹೊಸದಾಗಿ ಯು.ಟಿಖಾದರ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರನ್ನು ಸೇರ್ಪಡೆ ಮಾಡಿಕೊಂಡಿದ್ದರು.
ಹೊಸಬರಿಗೆ ಅವಕಾಶ
ಸರ್ಕಾರ ರಚನೆ ಸಂದರ್ಭದಲ್ಲಿ ಕೆಲವು ಘಟಾನುಘಟಿಗಳಿಗೆ ಅವಕಾಶ ನೀಡಿರಲಿಲ್ಲ, ಪಕ್ಷದ ಅಧಿನಾಯಕ ರಾಹುಲ್ ಗಾಂಧಿ ಮುಂದಿನ ಸಂಪುಟ ವಿಸ್ತರಣೆ ವೇಳೆ ಯುವಕರು ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸಿ ಎಂದು ಆದೇಶಿಸಿದ್ದಾರೆ.
ಮೊದಲ ಬಾರಿ ವಿಧಾನಸಭೆ ಪ್ರವೇಶಿದವರಿಗೆ ಮಂತ್ರಿಮಂಡಲದಲ್ಲಿ ಅವಕಾಶ ಬೇಡ, ಸೇವಾಹಿರಿತನ ಮತ್ತು ಎಲ್ಲಾ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಿಸುವ ಮೂಲಕ ಸಂಪುಟ ವಿಸ್ತರಿಸಿ ಎಂದಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸ್ಥಾನಗಳಿಗೆ ನಡೆದಿರುವ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ನಂತರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಮುಂದಾಗಲಿದ್ದಾರೆ.
ಸುರ್ಜೇವಾಲ ಜೊತೆ ಚರ್ಚೆ
ನಗರದಲ್ಲೇ ಉಳಿದಿದ್ದ ಎಐಸಿಸಿ ಪ್ರಧಾನಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಈ ಸಂಬಂಧ ಈಗಾಗಲೇ ಚರ್ಚಿಸಿದ್ದಾರೆ.
ಎಚ್.ಕೆ.ಪಾಟೀಲ್, ಡಾ.ಎಚ್.ಸಿ.ಮಹದೇವಪ್ಪ ಅಲ್ಲದೆ, ಸಿದ್ದರಾಮಯ್ಯ ಸಂಪುಟದಲ್ಲಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿದ್ದ ಮಂಕಾಳ ವೈದ್ಯ, ಆರ್.ಬಿ.ತಿಮ್ಮಾಪುರ, ರಹೀಂ ಖಾನ್, ಶರಣಬಸಪ್ಪ ದರ್ಶನಾಪುರ ಅವರಿಗೂ ಅವಕಾಶ ಇಲ್ಲ.
ಇವರಲ್ಲದೆ, ಸಂತೋಷ್ ಎಸ್. ಲಾಡ್, ಶಿವಾನಂದ ಪಾಟೀಲ್, ಶಿವರಾಜ್ ತಂಗಡಗಿ, ಡಾ.ಎಂ.ಸಿ.ಸುಧಾಕರ್ ಅವರಿಗೂ ಅವಕಾಶ ಕಲ್ಪಿಸದೆ, ಇವರ ಸ್ಥಾನಗಳಿಗೆ ಹೊಸ ಮುಖಗಳು ಬರಲಿವೆ.
ಕೆಲವರಿಗೆ ಸಂಪುಟದಲ್ಲಿ ಸ್ಥಾನ
ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಗಳಾಗಿದ್ದ ಕೆಲವರಿಗೆ ವಿಸ್ತರಣೆ ಸಂದರ್ಭದಲ್ಲಿ ಅವಕಾಶ ದೊರೆಯಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ವಿಧಾನಸಭಾಧ್ಯಕ್ಷ ಸ್ಥಾನ ತೆರವುಗೊಳಿಸಿರುವ ಯು.ಟಿ.ಖಾದರ್ ಸ್ಥಾನಕ್ಕೆ ಕಾನೂನು ಸಚಿವರಾಗಿ ಕಾರ್ಯನಿರ್ವಹಿಸಿರುವ ಎಚ್.ಕೆ.ಪಾಟೀಲ್ ಅವರನ್ನು ನಾಮಕ ಮಾಡಲು ಮುಖ್ಯಮಂತ್ರಿ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಜೂನ್ 10ರಂದು ದೆಹಲಿಗೆ ತೆರಳಲಿದ್ದು, ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಒಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಇದೇ ಮೂಲಗಳು ತಿಳಿಸಿವೆ.


