ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಇಂದಿಲ್ಲಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಗಾರು ಆರಂಭವಾಗಿ ಹಲವು ದಿನ ಕಳೆದರೂ ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗಿಲ್ಲ, ಆದರೂ, ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಇಲ್ಲ, ಜನರು ಆತಂಕಕ್ಕೆ ಒಳಗಾಗಬಾರದು ಎಂದರು.
11 ಟಿಎಂಸಿ ನೀರು ಸಂಗ್ರಹ
ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯದಲ್ಲಿ ಪ್ರಸ್ತುತ 11 ಟಿಎಂಸಿ ನೀರು ಸಂಗ್ರಹವಿದೆ, ಹವಾಮಾನ ಇಲಾಖೆ ಪ್ರಕಾರ ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವ ಇರುವುದರಿಂದ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ.
ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶಿತ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ, ಇದು ಸಂಪೂರ್ಣವಾಗಿ ಕುಡಿಯುವ ನೀರು ಯೋಜನೆಯಾಗಿದೆ.
ಈ ಜಲಾಶಯದಲ್ಲಿ ಸಂಗ್ರಹವಾಗುವ ನೀರನ್ನು ಕುಡಿಯುವುದಕ್ಕೆ ಅಲ್ಲದೆ, ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದಿಲ್ಲ ಎಂಬುದಾಗಿ ಕರ್ನಾಟಕ ತಿಳಿಸಿದ್ದರೂ, ತಮಿಳುನಾಡು ಸರ್ಕಾರ ಕ್ಯಾತೆ ತೆಗೆಯುತ್ತಿದೆ.
ಯೋಜನೆಗೆ ಅನಗತ್ಯ ಅಡ್ಡಿ
ಮೇಕೆದಾಟು ಜಲಾಶಯ ಯೋಜನೆ, ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಲ್ಲಿ ಒಂದಾಗಿದೆ, ತಮಿಳುನಾಡು ಸರ್ಕಾರ ಅನಗತ್ಯವಾಗಿ ಯೋಜನೆಗೆ ಅಡ್ಡಿಪಡಿಸುತ್ತಿದೆ.
ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ರಾಜಧಾನಿ ಬೆಂಗಳೂರಿಗೆ 4.75 ಟಿಎಂಸಿ ಕುಡಿಯುವ ನೀರು ಲಭ್ಯವಾಗಲಿದೆ, ಅಲ್ಲದೆ, 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ.
ಕೇಂದ್ರ ನಿದೇರ್ಶನದಂತೆ ತಮಿಳುನಾಡಿಗೆ ತಿಂಗಳಿಗೊಮ್ಮೆ ನೀರು ಹರಿಸಬೇಕು, ಜೂನ್ನಲ್ಲಿ 19 ಟಿಎಂಸಿ ನೀರು ಬಿಡಬೇಕಿದೆ, ಪ್ರಸ್ತುತ ನಮ್ಮ ಬಳಿ 16 ಟಿಎಂಸಿ ಮಾತ್ರ ನೀರು ಸಂಗ್ರಹವಿದೆ.
ಸಲಹೆ ಪಡೆಯುವ ಚಿಂತನೆ
ಕುಡಿಯುವ ನೀರಿಗೆ ಕೇವಲ 3 ಟಿಎಂಸಿ ಉಳಿದಿದೆ, ಸಂಕಷ್ಟ ಸಂದರ್ಭದಲ್ಲಿ ನೀರು ಹರಿಸುವ ಕುರಿತು ಸಲಹೆ ಪಡೆಯುವ ಚಿಂತನೆ ಇದೆ.
ಮೇಕೆದಾಟು ಜಲಾಶಯದಲ್ಲಿ ನೀರು ಸಂಗ್ರಹವಾದರೆ ತಮಿಳುನಾಡು ರೈತರಿಗೆ ಉಪಯೋಗವಾಗುತ್ತದೆ, ನೆಲ, ಜಲ, ಭಾಷೆ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ, ನ್ಯಾಯಾಲಯಕ್ಕೆ ಹೋಗುವುದಕ್ಕಿಂತ ಕುಳಿತು ಚರ್ಚಿಸುವುದು ಸೂಕ್ತ.
ಕೃಷ್ಣಾ ಮೇಲ್ದಂಡೆ ಯೋಜನೆ ವಿವಾದ 13-14 ವರ್ಷಗಳಿಂದ ಪರಿಹಾರವಾಗಿಲ್ಲ, ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ ಅರ್ಜಿ ತಿರಸ್ಕಾರವಾಗಿದೆ, ಅಲ್ಲದೆ, ಪುನರ್ ಪರಿಶೀಲನಾ ಅರ್ಜಿಯನ್ನೂ ಎರಡು ಬಾರಿ ತಿರಸ್ಕರಿಸಿದೆ, ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ.
ಹೋರಾಟಕ್ಕೆ ಕರೆ
ಆ ರಾಜ್ಯದ ಮುಖ್ಯಮಂತ್ರಿ ಜೋಸೆಫ್ ವಿಜಯ್ ಮೇಕೆದಾಟು ಯೋಜನೆ ವಿರೋಧಿಸಿ ಹೋರಾಟಕ್ಕೆ ಕರೆ ನೀಡಿದ್ದಾರೆ.
ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಾಗಿದೆ, ತಮಿಳುನಾಡಿಗೆ ನಿಗದಿಪಡಿಸಿರುವ ನೀರಿನಲ್ಲಿ ನಮಗೆ ಒಂದೇ ಒಂದು ಹನಿ ನೀರೂ ಬೇಡ ಎಂದರು.
ಚುನಾವಣೆ ನಂತರ ವಿರೋಧ ಮರೆತು, ನೀರು ಕೊಡುವ ಮತ್ತು ತೆಗೆದುಕೊಳ್ಳುವಲ್ಲಿ ಒಟ್ಟಿಗೆ ಕೆಲಸ ಮಾಡಬೇಕು, ಈ ಕುರಿತು ಇತ್ತೀಚೆಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಗಿದೆ, ಮಹದಾಯಿ, ಮೇಕೆದಾಟು ಸೇರಿದಂತೆ ಬಾಕಿ ಇರುವ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ.
ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ನಮ್ಮನ್ನೂ ಕರೆಸಿ ಮಾತನಾಡಿ ಎಂಬ ಮನವಿ ಮಾಡಿದ್ದೇವೆ ಎಂದರು.


