ಬೆಂಗಳೂರು : ಮಂತ್ರಿಮಂಡಲ ವಿಸ್ತರಿಸಲು ಮುಂದಾಗಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ದೆಹಲಿ ವರಿಷ್ಠರು ಬ್ರೇಕ್ ಹಾಕಿದ್ದಾರೆ.
ಸಂಪುಟ ವಿಸ್ತರಿಸಿ, 18 ಮಂದಿ ಶಾಸಕರನ್ನು ಸೇರ್ಪಡೆ ಮಾಡಿಕೊಳ್ಳಲು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಜೂನ್ 23 ರಂದು ದೆಹಲಿ ಪ್ರವಾಸ ಕೈಗೊಳ್ಳಬೇಕಿತ್ತು.
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ವರಿಷ್ಠರೇ ಜೂನ್ 23 ರಂದು ದೆಹಲಿಗೆ ಬರುವಂತೆ ಈ ಮೊದಲು ಸೂಚಿಸಿತ್ತು. ಆದರೆ ಏಕಾಏಕಿ ನಾವು ಹೇಳುವವರೆಗೂ ನೀವು ದೆಹಲಿಗೆ ಬರುವುದು ಬೇಡ ಎಂದು ಶಿವಕುಮಾರ್ ಹಾಗೂ ಹರಿಪ್ರಸಾದ್ ಅವರಿಗೆ ಸಂದೇಶ ರವಾನಿಸಿದ್ದಾರೆ.
ಇದರ ಹಿನ್ನೆಲೆಯಲ್ಲಿ ಹರಿಪ್ರಸಾದ್ ತಿಂಗಳ ಅಂತ್ಯದವರೆಗೂ ರಾಜ್ಯ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.
ಕಳೆದ ಜೂನ್ 3 ರಂದು ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ತಮ್ಮ ಸಂಪುಟಕ್ಕೆ 13 ಮಂದಿಯನ್ನು ಸೇರ್ಪಡೆ ಮಾಡಿಕೊಂಡು ಖಾತೆಗಳ ಹಂಚಿಕೆ ಮಾಡಿದ್ದರು. ಖಾತೆ ಹಂಚಿಕೆ ಬಗ್ಗೆ ನಿಷ್ಠಾವಂತ ಕಾಂಗ್ರೆಸ್ಸಿಗರಾಗಿರುವ ಸಚಿವ ಕೃಷ್ಣಾಬೈರೇಗೌಡ, ಕೆ.ಎಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಮಂತ್ರಿಗಳು ಬಹಿರಂಗವಾಗಿಯೇ ಅಸಮಧಾನ ವ್ಯಕ್ತಪಡಿಸಿದ್ದರು.
ಸರ್ಕಾರ ರಚನೆ ಸಂದರ್ಭದಲ್ಲಿ ಸಚಿವರಿಂದ ಉಂಟಾದ ಅಸಮಧಾನ ಹೋಗಲಾಡಿಸಲು ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ್, ಬೆಂಗಳೂರಿನಲ್ಲೇ ಬಿಡಾರ ಹೂಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಜೂನ್ ತಿಂಗಳಾಂತ್ಯಕ್ಕೆ ಮಂತ್ರಿಮಂಡಲ ವಿಸ್ತರಣೆಯಾಗುತ್ತದೆ ಎಂಬ ಮಾಹಿತಿ ದೊರೆಯುತ್ತಿದ್ದಂತೆ ಕಾಂಗ್ರೆಸ್ನ 50-60 ಶಾಸಕರು ದೆಹಲಿಯಲ್ಲೇ ಬಿಡಾರ ಹೂಡಿ, ವರಿಷ್ಠರ ಮನವೊಲಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ.
ದೊಡ್ಡ ಸಂಖ್ಯೆಯಲ್ಲಿ ಆಕಾಂಕ್ಷಿಗಳಿದ್ದಾರೆ. ಆದರೆ ಮಂತ್ರಿಮಂಡಲಕ್ಕೆ ಕೇವಲ 18 ಮಂದಿಯನ್ನು ತೆಗೆದುಕೊಳ್ಳುವುದರಿಂದ, ಅನಂತರ ಸರ್ಕಾರ ಮತ್ತು ಪಕ್ಷದಲ್ಲಿ ಭಿನ್ನಾಭಿಪ್ರಾಯ ಮತ್ತು ಬಂಡಾಯಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಮಂತ್ರಿಮಂಡಲದ ವಿಸ್ತರಣೆ ವಿಚಾರ ತಿಳಿಯಾಗುವವರೆಗೂ ಯಾವುದೇ ತೀರ್ಮಾನ ಕೈಗೊಳ್ಳುವುದು ಬೇಡ ಎಂದು ವರಿಷ್ಠರು ನಿರ್ಧರಿಸಿ, ಅದರ ಸಂದೇಶವನ್ನು ರಾಜ್ಯ ನಾಯಕರುಗಳಿಗೆ ನೀಡಿದ್ದಾರೆ.
ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಜೂನ್ 22ರಂದು ದೆಹಲಿಗೆ ತೆರಳಬೇಕಿದ್ದ ಸಿದ್ದರಾಮಯ್ಯ ತಮ್ಮ ನಿರ್ಧಾರ ಬದಲಿಸಿ, ನಗರದಲ್ಲೇ ಉಳಿದುಕೊಂಡಿದ್ದಾರೆ. ಹರಿಪ್ರಸಾದ್ ರಾಜ್ಯ ಪ್ರವಾಸ ಕೈಗೊಂಡರೇ, ಪರಮೇಶ್ವರ್ ಅನಾರೋಗ್ಯದಿಂದ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಮುಖ್ಯಮಂತ್ರಿಯವರು ಮಾತ್ರ ಅಭಿವೃದ್ಧಿ ಸಭೆಗಳನ್ನು ನಡೆಸಲು ಮುಂದಾಗಿದ್ದಾರೆ.


