ನವದೆಹಲಿ:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬುಧವಾರ ಇಲ್ಲವೇ ಗುರುವಾರ ತಮ್ಮ ಮಂತ್ರಿಮಂಡಲ ವಿಸ್ತರಿಸಿ 18 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲಿದ್ದಾರೆ.
ಮಂತ್ರಿಮಂಡಲಕ್ಕೆ ಸೇರ್ಪಡೆಗೊಳ್ಳುವವರ ಪಟ್ಟಿಗೆ ದೆಹಲಿ ನಾಯಕರು ಅಂತಿಮ ರೂಪ ನೀಡುತ್ತಿದ್ದಂತೆ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ನಡೆದಿದೆ.
ಲೋಕಭವನದಲ್ಲಿ ಪ್ರಮಾಣವಚನ
ಲೋಕಭವನದ ಗಾಜಿನಮನೆಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.
ಜ್ಯೋತಿಷಿ ಆರಾಧ್ಯ ಅವರು ನೀಡುವ ಸಮುಯಕ್ಕೆ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಲಿದೆ.
ರಾಜ್ಯಪಾಲರು ಮಧ್ಯಪ್ರದೇಶಕ್ಕೆ ಒಂದು ದಿನದ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ವಿಷಯ ತಿಳಿಯುತ್ತಿದ್ದಂತೆ, ಪ್ರವಾಸ ಮುಂದೂಡುವಂತೆ ಮುಖ್ಯಮಂತ್ರಿ ಮನವಿ ಮಾಡಿಕೊಂಡಿದ್ದಾರೆ.
ಕಾರ್ಯಕ್ರಮಕ್ಕೆ ಸಿದ್ಧತೆ ಆರಂಭ
ಈ ಮಧ್ಯೆ, ಆಡಳಿತ ಮತ್ತು ಸಿಬ್ಬಂದಿ ಇಲಾಖೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆ ಆರಂಭಿಸಿದೆ.
ಜುಲೈ 22ರಂದೇ ಮಂತ್ರಿಮಂಡಲ ವಿಸ್ತರಿಸಲು ಮುಖ್ಯಮಂತ್ರಿ ಸಿದ್ಧತೆ ನಡೆಸಿದ್ದರು, ದೆಹಲಿ ನಾಯಕರೊಂದಿಗೆ ಮಾತುಕತೆಯೂ ನಡೆದಿತ್ತು, ಆದರೆ, ನೀಟ್ ಪರೀಕ್ಷೆ ಅಕ್ರಮ ವಿರುದ್ಧದ ಹೋರಾಟ ತಾರಕಕ್ಕೇರಿದ್ದರಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.
ಈ ಮಧ್ಯೆ, ಪಕ್ಷದ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಬಂದಿದ್ದ ಎಐಸಿಸಿ ರಾಜಕೀಯ ಕಾರ್ಯದರ್ಶಿ ಕೆ.ಸಿ.ವೇಣುಗೊಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ, ಸಂಪುಟ ವಿಸ್ತರಣೆ ವಿಳಂಬದಿಂದ ಆಗುತ್ತಿರುವ ಆಡಳಿತದಲ್ಲಿನ ಅಡಚಣೆ ಕುರಿತು ಮುಖ್ಯಮಂತ್ರಿ ಮನವರಿಕೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಸರಣಿ ಸಭೆ
ಈ ಮನವಿಗೆ ಸ್ಪಂದಿಸಿದ ನಾಯಕರು ಇಂದು ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ದೆಹಲಿಗೆ ಕರೆಸಿಕೊಂಡು ಸರಣಿ ಸಭೆಗಳನ್ನು ನಡೆಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಮೊದಲ ಸುತ್ತಿನ ಸಭೆ ನಂತರ ಈಗಾಗಲೇ ಸಿದ್ಧಗೊಂಡಿದ್ದ ಪಟ್ಟಿಯನ್ನು ಮತ್ತೊಮ್ಮೆ ಪರಿಶೀಲಿಸಿ ಅಂತಿಮವಾಗಿ ರಾಹುಲ್ ಗಾಂಧಿ ಅನುಮೋದನೆಗೆ ಕಳುಹಿಸಲಾಯಿತು.
ಖರ್ಗೆ ಜೊತೆ ಮಾತುಕತೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಅವರು, ತಮ್ಮ ಸಚಿವಾಲಯದ ಅಧಿಕಾರಿಗಳಿಗೆ ಸಂಪುಟ ವಿಸ್ತರಣೆ ಸಿದ್ಧತೆಗೆ ಸೂಚಿಸಿದ್ದಲ್ಲದೆ, ವರಿಷ್ಠರು ತಮಗೆ ಪಟ್ಟಿ ನೀಡಿದ ನಂತರ ಲೋಕಭವನಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ.
ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 53 ದಿನ ಕಳೆದರೂ ತಮ್ಮ ಮಂತ್ರಿಮಂಡಲ ವಿಸ್ತರಿಸಲು ಸಾಧ್ಯವಾಗಿಲ್ಲ.
ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಅವರು, ಇಂದು ಇಡೀ ದಿನ ದೆಹಲಿಯಲ್ಲಿ ಕಸರತ್ತು ನಡೆಸಿದರು.


